2027ರ ಜನವರಿಯಲ್ಲಿ ಬೀದರ್ನಲ್ಲಿ ಅಗ್ನಿವೀರ ಸೇನಾ ಭರ್ತಿ ರ್ಯಾಲಿ

ಬೀದರ್ : ಜಿಲ್ಲೆಯಲ್ಲಿ ಜನವರಿ-2027ರಲ್ಲಿ ಹಲವು ವರ್ಷಗಳ ಬಳಿಕ ಅಗ್ನಿವೀರ ಸೇನಾ ಭರ್ತಿ ರ್ಯಾಲಿ ನಡೆಯಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಯುವಕರಿಗೆ ಈ ಸೇನಾ ಭರ್ತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಅವಕಾಶ ಲಭ್ಯವಿದೆ. ವಿಶೇಷವಾಗಿ ಬೀದರ್ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ರ್ಯಾಲಿ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಜಿಲ್ಲಾಡಳಿತದಿಂದ ಅಗತ್ಯ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಈ ವೇಳೆ ಮಾತನಾಡಿದ ಕರ್ನಲ್ ಅಶ್ವಿನಿ, ಬೀದರ್ನಲ್ಲಿ ಐದು ವರ್ಷಗಳ ಬಳಿಕ ಸೇನಾ ಭರ್ತಿ ರ್ಯಾಲಿ ನಡೆಯುತ್ತಿರುವುದು ಮಹತ್ವದ್ದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬೀದರ್ ಜಿಲ್ಲೆಯ ಅಭ್ಯರ್ಥಿಗಳು ಸಾಮಾನ್ಯವಾಗಿ ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಯುವಕರಲ್ಲಿ ಸೇನಾ ಭರ್ತಿ ಕುರಿತಾಗಿ ಹೆಚ್ಚಿನ ಜಾಗೃತಿ ಮತ್ತು ಪ್ರಚಾರ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.






