ಅಹಿಂದ ಸಂಘಟನೆ ಗ್ರಾಮ ಮಟ್ಟಕ್ಕೂ ವಿಸ್ತರಿಸಬೇಕು: ಯತೀಂದ್ರ ಸಿದ್ದರಾಮಯ್ಯ

ಬೀದರ್ : ಅಹಿಂದ ಸಮುದಾಯಗಳ ಸಂಘಟನೆ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟಕ್ಕೆ ಮಾತ್ರ ಸೀಮಿತವಾಗದೆ ತಾಲೂಕು ಮತ್ತು ಗ್ರಾಮ ಮಟ್ಟಕ್ಕೂ ವಿಸ್ತರಿಸಬೇಕು. ಅಹಿಂದ ವರ್ಗದವರಲ್ಲಿ ರಾಜಕೀಯ ಜಾಗೃತಿ ಬೆಳೆದಾಗ ಮಾತ್ರ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಒಕ್ಕೂಟ (ಅಹಿಂದ) ಜಿಲ್ಲಾ ಶಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶೋಷಿತ ಸಮುದಾಯಗಳ ಮುಖಂಡರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಶೋಷಿತ ವರ್ಗದವರ ಮೇಲಿನ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ರಾಜಕೀಯ ಶಕ್ತಿ ಬೆಳೆಸಿಕೊಂಡಾಗ ಮಾತ್ರ ಸಮಾನ ಹಕ್ಕುಗಳನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಶತಮಾನಗಳಿಂದ ನಡೆಯುತ್ತಿರುವ ಜಾತಿ ಆಧಾರಿತ ಶೋಷಣೆಯ ವಿರುದ್ಧ ಬುದ್ಧ, ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್, ದೇವರಾಜ ಅರಸು ಹಾಗೂ ವಿ.ಪಿ. ಸಿಂಗ್ ಅವರಂತಹ ಮಹಾನಾಯಕರು ಹೋರಾಟ ನಡೆಸಿದ್ದಾರೆ. ಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಸಂವಿಧಾನದ ರಕ್ಷಣೆ, ಜಾತಿ ಸಮೀಕ್ಷೆ ವರದಿ ಜಾರಿ ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.
ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರ ಮಾತನಾಡಿ, ಸಾಮಾನ್ಯ ಜನರಿಗೆ ನ್ಯಾಯಯುತ ಅವಕಾಶಗಳು ದೊರೆಯಬೇಕಾದರೆ ಸಂಘಟಿತ ಹೋರಾಟ ಅನಿವಾರ್ಯವಾಗಿದೆ. ಸಂವಿಧಾನಬದ್ಧ ಸಮಾನತೆ ಹಾಗೂ ಆರ್ಥಿಕ ಸಬಲತೆಗಾಗಿ ಶೋಷಿತ ಸಮುದಾಯಗಳು ಒಂದಾಗಬೇಕು ಎಂದು ಹೇಳಿದರು.
ಸಂಸದ ಸಾಗರ್ ಖಂಡ್ರೆ ಮಾತನಾಡಿ, ಅಹಿಂದ ಸಮುದಾಯಗಳಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರಕಬೇಕು. ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಅಹಿಂದ ವರ್ಗದವರಿಗೆ ನೀಡುವಂತೆ ಪಕ್ಷದ ವರಿಷ್ಠರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಎಐಸಿಸಿ ವೀಕ್ಷಕ ರಾಜೇಶ್ ಲಿಲೋಥಿಯಾ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಘಟಿತ ಹೋರಾಟ ಎರಡೂ ಅಗತ್ಯವೆಂದು ಹೇಳಿದರು.
ಸಮಾವೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಆಧರಿಸಿ ನ್ಯಾಯಸಮ್ಮತ ಮೀಸಲಾತಿ ನೀತಿ ಜಾರಿಗೊಳಿಸುವುದು, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವುದು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೊಳಿಸುವುದು ಹಾಗೂ ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣವನ್ನು ವಿರೋಧಿಸುವಂತೆ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಯಿತು.
ಈ ಸಂದರ್ಭದಲ್ಲಿ ರಹೀಮ್ ಖಾನ್, ಮಾಜಿ ಶಾಸಕ ಅಶೋಕ್ ಖೇಣಿ, ಬುಡಾ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಪ್ರಮುಖರಾದ ಅನಿಲಕುಮಾರ್ ಬೆಲ್ದಾರ್, ಭೀಮಸೇನರಾವ್ ಸಿಂಧೆ, ಬಸವರಾಜ್ ಮಾಳಗೆ, ತಾನಾಜಿ ಸಗರ್, ಮಕ್ಸುದ್ ಚಂದಾ, ರಾಜಶೇಖರ ಸೇಡಂಕರ್, ರಮೇಶ್ ಡಾಕುಳಗಿ, ವಿಜಯಲಕ್ಷ್ಮೀ ಗಡ್ಡೆ ಹಾಗೂ ದೇವಿದಾಸ್ ತುಮಕುಂಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






