ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಬೀದರ್ನಲ್ಲಿ ಚಾಲನೆ

ಬೀದರ್: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಜಾರಿಗೆ ವಿರೋಧ ವ್ಯಕ್ತಪಡಿಸಿ ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಅಂಗವಾಗಿ, ಕಲ್ಯಾಣ ಕರ್ನಾಟಕ ಭಾಗದಿಂದ ಹೊರಡಲಿರುವ ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾಕ್ಕೆ ಶನಿವಾರ ಬೀದರ್ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಯಿತು.
ಎಸ್ಐಆರ್ ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ, ಜಾತ್ಯಾತೀತ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳ ಮೂಲಕ ಸಂಚರಿಸಿ ಜೂ.20ರಂದು ಬೆಂಗಳೂರಿನಲ್ಲಿ ಸಮಾವೇಶಗೊಳ್ಳಲಿದೆ.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಎದ್ದೇಳು ಕರ್ನಾಟಕದ ಮುಖಂಡ ಜೆ.ಎಂ. ವೀರಸಂಗಯ್ಯ, ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಸಾಂವಿಧಾನಿಕ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಬಾರದು. ಚುನಾವಣಾ ಆಯೋಗವು ಇತರೆ ರಾಜ್ಯಗಳಲ್ಲಿ ಅನುಸರಿಸಿದ ಅವೈಜ್ಞಾನಿಕ ಮಾನದಂಡಗಳನ್ನು ಕರ್ನಾಟಕದಲ್ಲಿ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.
ಮತದಾರರ ಬಳಿ ಅಗತ್ಯ ದಾಖಲೆಗಳಿಲ್ಲದಿದ್ದರೆ ರಾಜ್ಯ ಸರ್ಕಾರ ಗ್ರಾಮಸಭೆಗಳ ಮೂಲಕ ಅವರಿಗೆ ದಾಖಲೆಗಳನ್ನು ಒದಗಿಸಬೇಕು. ಸಣ್ಣಪುಟ್ಟ ಮಾಹಿತಿ ಕೊರತೆಯನ್ನು ನೆಪವನ್ನಾಗಿ ಮಾಡಿಕೊಂಡು ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಯತ್ನ ನಡೆಯಬಾರದು ಎಂದು ಅವರು ಆಗ್ರಹಿಸಿದರು.
ಸಿಪಿಐ ಮುಖಂಡ ಬಾಬುರಾವ್ ಹೊನ್ನಾ ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯು ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡುವ ಬೆಳವಣಿಗೆಯಾಗಿದೆ ಎಂದು ಆರೋಪಿಸಿದರು. ಮತದಾರರ ಹಕ್ಕುಗಳ ರಕ್ಷಣೆಗಾಗಿ ಜನರು ಸಂಘಟಿತ ಹೋರಾಟ ನಡೆಸಬೇಕಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಮೌಲ್ಯಗಳ ಸಂರಕ್ಷಣೆಗೆ ಜನಾಂದೋಲನ ಅಗತ್ಯವಾಗಿದೆ ಎಂದು ಹೇಳಿದರು.
ಜಾಥಾದ ಮೂಲಕ ಎಸ್ಐಆರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಮತದಾರರ ಹಕ್ಕುಗಳ ರಕ್ಷಣೆಗೆ ರಾಜ್ಯವ್ಯಾಪಿ ಹೋರಾಟವನ್ನು ಬಲಪಡಿಸಲಾಗುವುದು ಎಂದು ಸಂಘಟನೆಯ ಮುಖಂಡರು ತಿಳಿಸಿದರು.
ಈ ವೇಳೆ ಬೀದರ್ ಬಸವ ಮಂಟಪದ ಸತ್ಯದೇವಿ, ದಸಂಸ ಮುಖಂಡ ಮಾರುತಿ ಬೌದ್ಧೆ, ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ, ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ ಮಾತನಾಡಿದರು.
ಈ ಸಂದರ್ಭದಲ್ಲಿ ಎದ್ದೇಳು ಕರ್ನಾಟಕದ ಸಂಯೋಜಕ ಓಂಪ್ರಕಾಶ್ ರೊಟ್ಟೆ, ಜಗದೀಶ್ವರ್ ಬಿರಾದರ್, ನಿಜಾಮುದ್ದೀನ್, ವಿಠಲದಾಸ್ ಪ್ಯಾಗೆ, ಶ್ರೀಕಾಂತ್ ಸ್ವಾಮಿ, ಮಹೇಶ್ ಗೊರನಾಳಕರ್, ಮಲ್ಲಿಕಾರ್ಜುನ್ ಸ್ವಾಮಿ, ಕಾಶಿನಾಥ್ ಚೆಲ್ವಾ, ಲಕ್ಷ್ಮಣ್ ಮಂಡಲಗೇರಾ, ದುರ್ಗೇಶ್, ಚಂದ್ರು ತರಹುಣಸೆ, ಬಸವರಾಜ್ ಅಷ್ಟೂರೆ, ಸಂತೋಷ್ ಗುದಗೆ, ಶರಣು ಫುಲೆ, ಶಾಂತಮ್ಮ ಮೂಲಗೆ, ಉಮಾಕಾಂತ್ ವಿಳಾಸಪುರೆ, ಮುಹಮ್ಮದ್ ಆರಿಫೋದ್ದೀನ್, ಸೈಯದ್ ಇಬ್ರಾಹಿಂ, ಫಿರಾಜತ್ ಅಲಿ, ಅಸ್ಮಾ ಸುಲ್ತಾನ್, ಸಬೀಯಾ ಖಾನ್ ಹಾಗೂ ಮುಹಮ್ಮದ್ ಜಫರುಲ್ಲಾ ಖಾನ್ ಸೇರಿದಂತೆ ಆರ್ಪಿಐ, ಸಿಪಿಐ, ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ವಿಶ್ವಕ್ರಾಂತಿ ದಿವ್ಯಪೀಠ, ಜಮಾಅತ್ ಇಸ್ಲಾಮಿ ಹಿಂದ್, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘ, ಅಖಿಲ ಭಾರತ ಲಿಂಗಾಯತ ಮಹಾಸಭೆ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.






