Aurad | ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಪ್ರತಿಯೊಬ್ಬರ ಹೊಣೆ: ಗುಂಡಪ್ಪ ಹುಡಗೆ

ಔರಾದ್: ಪ್ರಪಂಚವನ್ನು ಕಾಡುತ್ತಿರುವ ಅತಿದೊಡ್ಡ ಪರಿಸರ ಪಿಡುಗು ಪ್ಲಾಸ್ಟಿಕ್ ಮಾಲಿನ್ಯವಾಗಿದ್ದು, ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ಭೂಮಿ, ನೀರು ಹಾಗೂ ಗಾಳಿಯನ್ನು ನಂಜಾಗಿಸುತ್ತಿದೆ. ಆದ್ದರಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗುಂಡಪ್ಪ ಹುಡಗೆ ಹೇಳಿದರು.
ತಾಲೂಕಿನ ಸೋರಳ್ಳಿ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನ ಆಧುನಿಕ ಜೀವನಶೈಲಿಯ ಪರಿಣಾಮವಾಗಿ ಪ್ಲಾಸ್ಟಿಕ್ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದು ಪರಿಸರಕ್ಕೆ ಗಂಭೀರ ಹಾನಿ ಉಂಟುಮಾಡುತ್ತಿದೆ. ಈಗಲೇ ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡದಿದ್ದರೆ, ಮುಂದಿನ ಪೀಳಿಗೆಗೆ ಬದುಕಲು ಯೋಗ್ಯವಲ್ಲದ ಪರಿಸರವನ್ನು ಬಿಟ್ಟು ಹೋಗಬೇಕಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಕ ವೀರಕುಮಾರ್ ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಜಾಗೃತಿ ಮೂಡಿಸಬೇಕು. ಉತ್ತಮ ಸಂಸ್ಕಾರ ಮತ್ತು ಪರಿಸರದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆಯ ಅಂಗವಾಗಿ ಸೌಮ್ಯ ಕೋಳಾರ್ (ಕೆ) ಅವರಿಂದ 200 ಬಟ್ಟೆಯ ಚೀಲಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಜಾನನ ಮಳ್ಳಾ, ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ, ಅಜೀಂ ಪ್ರೇಮಜೀ ಫೌಂಡೇಶನ್ ಸಮನ್ವಯಾಧಿಕಾರಿ ಶಿವಾಜಿ ಹಾಗೂ ಪ್ರಕಾಶ್ ತಾಂದಳೆ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಅಂಬಾಟೆ, ಸಿಆರ್ಪಿ ದುಶ್ಯಂತ್, ನೌಜರ್, ಸಂಘದ ನಿರ್ದೇಶಕ ಬಾಲಾಜಿ ಬಿರಾದಾರ್, ರವಿಂದ್ರ ಡಿಗ್ಗಿ, ಎಸ್ಡಿಎಂಸಿ ಅಧ್ಯಕ್ಷ ಸಂತೋಷ್, ಶಾಲಾ ಮುಖ್ಯ ಶಿಕ್ಷಕ ಉಮಾಕಾಂತ್ ಹಾಗೂ ಭೀಮಾಶಂಕರ್ ಸೇರಿದಂತೆ ಇನ್ನಿತರರಿದ್ದರು.






