Aurad | ಎಸ್ಐಆರ್ ಅಭಿಯಾನ ಚುರುಕುಗೊಳಿಸಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ್ ಸೂಚನೆ

ಔರಾದ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹಾಗೂ ವೇಗವಾಗಿ ಅನುಷ್ಠಾನಗೊಳಿಸುವಂತೆ ಶಾಸಕ ಪ್ರಭು ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಎಸ್ಐಆರ್ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದ ಅವರು, ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಎನ್ಯೂಮರೇಷನ್ ಫಾರ್ಮ್ ಭರ್ತಿ ಹಾಗೂ ಮತದಾರರ ನೋಂದಣಿ ಪ್ರಕ್ರಿಯೆ ಕುರಿತು ಮಾಹಿತಿ ಪಡೆದು ಜಾಗೃತಿ ಮೂಡಿಸಿದರು.
ಈ ವೇಳೆ ಹಲವು ಗ್ರಾಮಗಳಲ್ಲಿ ಎಸ್ಐಆರ್ ಅಭಿಯಾನ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು. ಬಿಎಲ್ಒಗಳು ಮನೆಗಳಿಗೆ ಬಂದು ಎನ್ಯೂಮರೇಷನ್ ಫಾರ್ಮ್ ನೀಡಿ ಹೋಗಿದ್ದರೂ, ಅದನ್ನು ಹೇಗೆ ಭರ್ತಿ ಮಾಡಬೇಕು ಎಂಬ ಬಗ್ಗೆ ಸಮರ್ಪಕ ಮಾರ್ಗದರ್ಶನ ನೀಡಿಲ್ಲ. ಇದರಿಂದ ಅನೇಕ ಕುಟುಂಬಗಳು ಫಾರ್ಮ್ಗಳನ್ನು ಭರ್ತಿ ಮಾಡದೆ ಉಳಿಸಿಕೊಂಡಿವೆ. ಕೆಲ ಬಿಎಲ್ಒಗಳಿಗೂ ಫಾರ್ಮ್ ಭರ್ತಿ ಮಾಡುವ ವಿಧಾನ ಸಮರ್ಪಕವಾಗಿ ತಿಳಿದಿಲ್ಲ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರಭು ಚವ್ಹಾಣ, ನೋಡೆಲ್ ಅಧಿಕಾರಿಗಳು, ತಹಸೀಲ್ದಾರರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅಗತ್ಯವಿದ್ದಲ್ಲಿ ಬಿಎಲ್ಒಗಳಿಗೆ ತಕ್ಷಣ ತರಬೇತಿ ನೀಡಿ ಅಭಿಯಾನಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.
ಎಸ್ಐಆರ್ ಅಭಿಯಾನಕ್ಕೆ ನಿಯೋಜನೆಗೊಂಡಿರುವ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಅವರು ಹೇಳಿದರು.
ಪ್ರತಿಯೊಬ್ಬ ಅರ್ಹ ಮತದಾರರ ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡುವ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು. ಅಗತ್ಯವಿದ್ದರೆ ಸ್ಥಳದಲ್ಲೇ ನೆರವು ನೀಡಿ ಫಾರ್ಮ್ಗಳನ್ನು ಪೂರ್ಣಗೊಳಿಸಬೇಕು. ಜಾಗೃತಿ ಕೊರತೆ ಅಥವಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.
ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಎಸ್ಐಆರ್ ಕುರಿತು ಜನಜಾಗೃತಿ ಮೂಡಿಸುತ್ತಿದ್ದೇನೆ. ಔರಾದ್ ಹಾಗೂ ಕಮಲನಗರ ತಾಲೂಕಿನ ಎಲ್ಲ ಅರ್ಹ ಮತದಾರರು ಎನ್ಯೂಮರೇಷನ್ ಫಾರ್ಮ್ ಭರ್ತಿ ಮಾಡಿ ಬಿಎಲ್ಒಗಳಿಗೆ ಸಲ್ಲಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಪ್ರಭು ಚವ್ಹಾಣ ಮನವಿ ಮಾಡಿದರು.






