Aurad | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ: ಚನ್ನಪ್ಪ ಉಪ್ಪೆ

ಔರಾದ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ವಿಳಂಬ ಅಥವಾ ಬೇಜವಾಬ್ದಾರಿ ಕಂಡುಬಂದರೆ ಅದನ್ನು ಸಹಿಸಲಾಗುವುದಿಲ್ಲ ಎಂದು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚನ್ನಪ್ಪ ಉಪ್ಪೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳು ಬಡವರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿವೆ. ಯಾವುದೇ ಅರ್ಹ ಫಲಾನುಭವಿ ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಮಾತನಾಡಿ, ಸಭೆಗಳಲ್ಲಿ ಕೇವಲ ಅಂಕಿ-ಅಂಶಗಳ ಪ್ರಸ್ತುತಿಗಷ್ಟೇ ಸೀಮಿತವಾಗದೆ, ಗ್ರಾಮ ಮಟ್ಟದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ಕ್ರಮವಹಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಪಂಚ ಗ್ಯಾರಂಟಿ ಯೋಜನೆಗಳ ಸದಸ್ಯರಾದ ಡಿ.ಕೆ ಚಂದು, ಚೆನ್ನಬಸಪ್ಪ ಕೌಠಾ, ಸಲ್ಲಾವುದ್ದಿನ್ ಜಂಬಗಿ ಹಾಗೂ ಸಂಜುಕುಮಾರ್ ಉಜನಿ ಸೇರಿದಂತೆ ತಾಲೂಕು ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.






