Aurad | ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ತಹಶೀಲ್ದಾರ್ ಮಹೇಶ್ ಪಾಟೀಲ್

ಔರಾದ್ : ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಮಹೇಶ್ ಪಾಟೀಲ್ ಮನವಿ ಮಾಡಿದರು.
ಪಟ್ಟಣದ ವಿವಿಧ ಬಡಾವಣೆಗಳಿಗೆ ಮಂಗಳವಾರ ಭೇಟಿ ನೀಡಿ ಮತದಾರರಿಗೆ ವಿತರಿಸಲಾದ ಗಣತಿ ನಮೂನೆಗಳನ್ನು ಪರಿಶೀಲಿಸಿದ ಅವರು, ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು.
ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಅಗತ್ಯ ದಾಖಲೆಗಳನ್ನು ಒದಗಿಸಿ, ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಕಡ್ಡಾಯವಾಗಿ ಮರಳಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಮಾತನಾಡಿ, ಗಣತಿ ನಮೂನೆಗಳಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸ್ಪಷ್ಟವಾಗಿ ಭರ್ತಿ ಮಾಡಿ, ನೇರವಾಗಿ ಬಿಎಲ್ಒಗಳಿಗೇ ಸಲ್ಲಿಸುವಂತೆ ಮತದಾರರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಮಲ್ಲಿಕಾರ್ಜುನ್ ಆಲೂರೆ, ಬಿಎಲ್ಒ ನಾಗನಾಥ್, ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




