ಔರಾದ್ | ಆಧಾರ್ ಅಪ್ಡೇಟ್ಗೆ ಪರದಾಟ; ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತ ಸಾರ್ವಜನಿಕರು

ಔರಾದ್: ಕಮಲನಗರ ಪಟ್ಟಣದ ಅಟಲ್ಜೀ ಜನಸ್ನೇಹಿ ಕೇಂದ್ರದಲ್ಲಿ ಆಧಾರ್ ಕಾರ್ಡ್ ನವೀಕರಣಕ್ಕಾಗಿ ಸಾರ್ವಜನಿಕರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಡಿತರ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರದ ಮುಂದೆ ಜನದಟ್ಟಣೆ ಹೆಚ್ಚಾಗಿದೆ. ಕೆಲವು ವಿವರಗಳನ್ನು ಆನ್ಲೈನ್ನಲ್ಲಿ ತಿದ್ದುಪಡಿ ಮಾಡಬಹುದಾದರೂ, ಬಯೋಮೆಟ್ರಿಕ್ ನವೀಕರಣ ಹಾಗೂ ಕೆಲವು ಬದಲಾವಣೆಗಳಿಗೆ ಅಧಿಕೃತ ಕೇಂದ್ರದಲ್ಲೇ ಭೌತಿಕ ಪರಿಶೀಲನೆ ಕಡ್ಡಾಯವಾಗಿರುವುದರಿಂದ ಸಾರ್ವಜನಿಕರು ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ.
ಗ್ರಾಮೀಣ ಭಾಗದ ಜನರು ತಮ್ಮ ದಿನನಿತ್ಯದ ಕೆಲಸಗಳನ್ನು ಬಿಟ್ಟು, ವಿದ್ಯಾರ್ಥಿಗಳು ಶಾಲೆಗೆ ಗೈರುಹಾಜರಾಗಿ ಆಧಾರ್ ತಿದ್ದುಪಡಿಗಾಗಿ ಪದೇಪದೇ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಸರ್ವರ್ ಸಮಸ್ಯೆಯಿಂದ ಅಪ್ಡೇಟ್ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಸರ್ವರ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಮೂಲಕ ಆಧಾರ್ ನವೀಕರಣ ಪ್ರಕ್ರಿಯೆಯನ್ನು ಸುಗಮಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




