Aurad | ಹಾವು ಕಡಿದು ವಿದ್ಯಾರ್ಥಿ ಮೃತ್ಯು

ಔರಾದ್: ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿದು ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ನಾಗಮಾರಪಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಲಾರೆನ್ಸ್ (14) ಎಂದು ಗುರುತಿಸಲಾಗಿದೆ. ಎಂದಿನಂತೆ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ಲಾರೆನ್ಸ್ಗೆ ನಸುಕಿನ ಜಾವ ಸುಮಾರು 5 ಗಂಟೆ ವೇಳೆಗೆ ಹಾವು ಕಡಿದಿದೆ. ಬಳಿಕ ಕಾಲು ಜುಮ್ಮೆನ್ನುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೆಲವೇ ಕ್ಷಣಗಳಲ್ಲಿ ಬಾಯಿಯಿಂದ ನೊರೆ ಬಂದು ಪ್ರಜ್ಞೆ ತಪ್ಪಿದ್ದರಿಂದ ತಕ್ಷಣ ಔರಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೀದರ್ ಜಿಲ್ಲಾ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯೆಯೇ ಲಾರೆನ್ಸ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಇಬ್ಬರು ಪುತ್ರಿಯರ ನಡುವೆ ಏಕೈಕ ಪುತ್ರನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






