ಬಸವಕಲ್ಯಾಣ | ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂಥ್ ಮೊಮೆಂಟ್ ವತಿಯಿಂದ ಮನವಿ

ಬಸವಕಲ್ಯಾಣ : ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿ ಪದೇ ಪದೇ ಸಂಭವಿಸುತ್ತಿರುವ ವೈಫಲ್ಯಗಳು, ವಿಶೇಷವಾಗಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾಲಿಡಾರಿಟಿ ಯೂಥ್ ಮೊಮೆಂಟ್ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಂಬಂಧಿತ ಪರೀಕ್ಷಾ ಅಕ್ರಮಗಳ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ಕಾಲಮಿತಿಯ ತನಿಖೆ ನಡೆಸಬೇಕು. ಈ ಪ್ರಕರಣಗಳಲ್ಲಿ ಅಧಿಕಾರಿಗಳು, ಪರೀಕ್ಷಾ ಸಂಸ್ಥೆಗಳು, ಮಧ್ಯವರ್ತಿಗಳು ಹಾಗೂ ಸಂಘಟಿತ ಜಾಲಗಳ ಪಾತ್ರವನ್ನು ಸಮಗ್ರವಾಗಿ ಪರಿಶೀಲಿಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಲಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ, ಭ್ರಷ್ಟಾಚಾರ, ನಿರ್ಲಕ್ಷ್ಯ ಅಥವಾ ಪರೀಕ್ಷೆಯ ಗೌಪ್ಯತೆ ಕಾಪಾಡುವಲ್ಲಿ ವಿಫಲರಾದ ಎಲ್ಲ ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಕಾನೂನುಬದ್ಧ ಮತ್ತು ಇಲಾಖಾ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆರ್ಥಿಕ ನೆರವು, ಮಾನಸಿಕ ಸಮಾಲೋಚನಾ ಸೇವೆ ಹಾಗೂ ಅಗತ್ಯವಿದ್ದರೆ ಹೆಚ್ಚುವರಿ ಪರೀಕ್ಷಾ ಅವಕಾಶಗಳನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೇರಿದಂತೆ ಎಲ್ಲಾ ಪರೀಕ್ಷಾ ಸಂಸ್ಥೆಗಳ ಕಾರ್ಯವೈಖರಿಯನ್ನು ಸ್ವತಂತ್ರವಾಗಿ ಪರಿಶೀಲಿಸಿ, ಪಾರದರ್ಶಕತೆ, ಸೈಬರ್ ಭದ್ರತೆ, ಪರೀಕ್ಷಾ ಗೌಪ್ಯತೆ, ವೃತ್ತಿಪರ ಹೊಣೆಗಾರಿಕೆ ಹಾಗೂ ಪರಿಣಾಮಕಾರಿ ದೂರು ನಿವಾರಣಾ ವ್ಯವಸ್ಥೆಯನ್ನು ಒಳಗೊಂಡ ಬಲಿಷ್ಠ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹಾಗೂ ನಾಗರಿಕರೊಂದಿಗೆ ಸರ್ಕಾರ ಅರ್ಥಪೂರ್ಣ ಸಂವಾದ ನಡೆಸಬೇಕು. ನ್ಯಾಯಸಮ್ಮತ ಬೇಡಿಕೆಗಳನ್ನು ಮಂಡಿಸುವ ಮತ್ತು ಶಾಂತಿಯುತ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸುವ ಸಂವಿಧಾನಬದ್ಧ ಹಕ್ಕನ್ನು ರಕ್ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂಧರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಿಯಾಝ್ ಪಟೇಲ್, ತಾಲೂಕು ಅಧ್ಯಕ್ಷ ಝಬಿವುಲ್ಲಾಖಾನ್, ಸಂಘಟನೆಯ ಉಪಾಧ್ಯಕ್ಷ ಶಹಬಾಜ್ ಖಾನ್, ಮಾಜ್ ಮಾಮು ಹಾಗೂ ಮುಬಾಶಿರ್ ಮಾಮು ಸೇರಿದಂತೆ ಹಲವರಿದ್ದರು.






