ಅನುಭವ ಮಂಟಪದ ಮೂಲಕ ಬಸವಣ್ಣ ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದರು : ಸಲೀಂ ಅಹ್ಮದ್
ಬಸವಕಲ್ಯಾಣಕ್ಕೆ ವಿಧಾನ ಪರಿಷತ್ ಸಭಾಪತಿ ಭೇಟಿ

ಬಸವಕಲ್ಯಾಣ: 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದರು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹೇಳಿದರು.
ವಿಧಾನ ಪರಿಷತ್ ಸಭಾಪತಿ ಸ್ಥಾನ ದೊರೆತ ಬಳಿಕ ಮೊದಲ ಬಾರಿಗೆ ಬಸವಕಲ್ಯಾಣಕ್ಕೆ ಭೇಟಿ ನೀಡಿ ಬಸವೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಅವರು, ಬಸವಣ್ಣನವರ ಕರ್ಮಭೂಮಿಗೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.
ಈ ಹಿಂದೆ ಹಲವು ಬಾರಿ ಬಸವಕಲ್ಯಾಣಕ್ಕೆ ಬಂದಿದ್ದೇನೆ. ಆದರೆ ಸಭಾಪತಿಯಾದ ನಂತರ ಮೊದಲ ಭೇಟಿ ಬಸವಕಲ್ಯಾಣಕ್ಕೆ ನೀಡಿದ್ದು, ಅನುಭವ ಮಂಟಪಕ್ಕೆ ಭೇಟಿ ನೀಡಿ ಬಸವಣ್ಣನವರ ಮಾರ್ಗದಲ್ಲಿ ನಡೆಯುವ ಸಂಕಲ್ಪ ಮಾಡಿಕೊಂಡಿದ್ದೇನೆ. ಅವರ ತತ್ವ ಮತ್ತು ಮಾರ್ಗದರ್ಶನವನ್ನು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲೂ ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಈ ಹಿಂದೆ ನಗರದಲ್ಲಿ ನಡೆದ ಸೂಫಿ ಸಂತರ ಕಾರ್ಯಕ್ರಮದ ಸಂದರ್ಭದಲ್ಲಿ ಹತ್ತು ದಿನಗಳ ಕಾಲ ಬಸವಕಲ್ಯಾಣದಲ್ಲೇ ವಾಸವಾಗಿದ್ದೆ. ಇಲ್ಲಿನ ಸರ್ವಧರ್ಮೀಯರು ನೀಡಿದ ಪ್ರೀತಿ ಮತ್ತು ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.
ಬಳಿಕ ಅವರು ರಾಜ್-ಎ-ಸವರ್ ದರ್ಗಾ, ಬಸವೇಶ್ವರ ದೇವಸ್ಥಾನ ಹಾಗೂ ಹಜರತ್ ಎಸರಬ್ ಅಲಿ ಖಾದ್ರಿ ದರ್ಗಾಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಜೊತೆಗೆ ನಾಲೆಡ್ಜ್ ಪಾರ್ಕ್ ಪಬ್ಲಿಕ್ ಶಾಲೆ ಮತ್ತು ಅನುಭವ ಮಂಟಪದ ನಿರ್ಮಾಣ ಕಾಮಗಾರಿಯನ್ನೂ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.






