ಬೀದರ್ | ಎಐ ತಂತ್ರಜ್ಞಾನ ಭವಿಷ್ಯದಲ್ಲಿ ಸುಸ್ಥಿರ ಅಭಿವೃದ್ಧಿಗೆ ಹೊಸ ನಿರ್ಧಾರ ಕೈಗೊಳ್ಳಲು ನೆರವಾಗಲಿದೆ : ಶಿವಾನಂದ್ ಎಸ್.ಗೊರ್ನಾಳೆ

ಬೀದರ್ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಶಿಕ್ಷಣ, ಪರಿಸರ ಸಂರಕ್ಷಣೆ, ಸೌರಶಕ್ತಿ ಯೋಜನೆಗಳು, ಜಲ ಸಂಪನ್ಮೂಲ ನಿರ್ವಹಣೆ ಮತ್ತು ನಗರ ಯೋಜನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಭವಿಷ್ಯದಲ್ಲಿ ಕಡಿಮೆ ಸಂಪನ್ಮೂಲ ಬಳಕೆಯೊಂದಿಗೆ ತ್ವರಿತ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಲು ಎಐ ತಂತ್ರಜ್ಞಾನ ನೆರವಾಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಶಿವಾನಂದ್ ಎಸ್.ಗೊರ್ನಾಳೆ ಹೇಳಿದರು.
ಶುಕ್ರವಾರ ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವಾಣಿ ಉಪಕ್ರಮದಡಿ ಆಯೋಜಿಸಲಾಗಿದ್ದ 'ಸುಸ್ಥಿರ ಅಭಿವೃದ್ಧಿ ಮತ್ತು ಆಂತರಿಕ ಭವಿಷ್ಯಕ್ಕಾಗಿ ಎಐ ತಂತ್ರಜ್ಞಾನ' ವಿಷಯದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಸಂಸ್ಥೆಯು ಸುಸ್ಥಿರ ಅಭಿವೃದ್ಧಿಗೆ 17 ಗುರಿಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಮುಖ ಗುರಿಯಾಗಿದೆ. ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಈ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣ ನೀಡುವುದು ಸುಸ್ಥಿರ ಅಭಿವೃದ್ಧಿಯ ಪ್ರಮುಖ ಅಂಗವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಸಹಾಯ ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಮಲ್ಲಿಕಾರ್ಜುನ್ ಹಂಗರಗಿ, ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ನಿಯಂತ್ರಕಿ ಡಾ. ಶ್ರೀದೇವಿ ಸೋಮ್, ಕೆಆರ್ಇ ಸೊಸೈಟಿಯ ಉಪಾಧ್ಯಕ್ಷ ಬಿ.ಜಿ. ಶೆಟ್ಕರ್, ಕಾರ್ಯದರ್ಶಿ ಸತೀಶ್ ಪಾಟೀಲ್, ಜಂಟಿ ಕಾರ್ಯದರ್ಶಿ ಶಿವಾನಂದ್ ಗದ್ಗೆ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







