Bidar | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯಿಂದ ಮನವಿ

ಬೀದರ್: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಸುಮಾರು 30 ಸಾವಿರ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಎಲ್ಲಾ ಖಾಲಿ ಹುದ್ದೆಗಳಿಗೂ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸಲಾಗಿದೆ.
ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನಕ್ಕಾಗಿ ಪ್ರತ್ಯೇಕ 371(ಜೆ) ಅನುಷ್ಠಾನ ಪ್ರಾಧಿಕಾರವನ್ನು ರಚಿಸಬೇಕು ಎಂದು ಸಮಿತಿ ಒತ್ತಾಯಿಸಿದೆ. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನದ ಸಮರ್ಪಕ ಬಳಕೆಗೆ ಮುಂದಿನ ಹತ್ತು ವರ್ಷಗಳ ಕಾರ್ಯನೀತಿಯನ್ನು ರೂಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೃಷ್ಣಾ ಕೊಳ್ಳದಲ್ಲಿ ಕರ್ನಾಟಕಕ್ಕೆ ಲಭ್ಯವಿರುವ 700 ಟಿಎಂಸಿ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಸರ್ಕಾರದ ಗಮನ ಸೆಳೆಯಲಾಗಿದೆ.
ಕಲ್ಯಾಣ ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಜೊತೆಗೆ ಸುಸಜ್ಜಿತ ಕಟ್ಟಡಗಳು, ಪ್ರಯೋಗಶಾಲೆಗಳು, ಗ್ರಂಥಾಲಯಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ನಿರ್ಮಿಸಿ ಉನ್ನತ ಶಿಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.
ಪ್ರದೇಶದ ನಿರುದ್ಯೋಗಿ ವಿದ್ಯಾವಂತ ಯುವಕರಿಗಾಗಿ ವಿಶೇಷ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಹೈನುಗಾರಿಕೆಗೆ ಉತ್ತೇಜನ ನೀಡಲು ವಿಶೇಷ ಯೋಜನೆ ಜಾರಿಗೊಳಿಸುವುದರ ಜೊತೆಗೆ, ಬಳ್ಳಾರಿ ಜೀನ್ಸ್ ಉದ್ಯಮವನ್ನು ಮತ್ತಷ್ಟು ಬಲಪಡಿಸಿ ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಂಚಾಲಕಿ ರೇಷ್ಮಾ ಹಂಸರಾಜ್, ಪಂಡಿತರಾವ್ ಚಿದ್ರಿ, ವಿನಯ್ ಮಾಳಗೆ, ನಿಝಾಮುದ್ದಿನ್, ಸಾವಿತ್ರಿ, ಪ್ರಭು ಸಂತೋಷಕರ್, ಪಾಂಡುರಂಗ್, ಖಾಜಾಮಿಯಾ ಹಾಗೂ ಮಹೇಶ್ ಗೋರನಾಳಕರ್ ಸೇರಿದಂತೆ ಇತರರು ಇದ್ದರು.






