Bidar | ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

ಬೀದರ್: 2026-27ನೇ ಸಾಲಿಗೆ ಬೀದರ್ ಜಿಲ್ಲೆಯ ಕಾನೂನು ಪದವೀಧರ ಮತೀಯ ಅಲ್ಪಸಂಖ್ಯಾತರ 3 ಅಭ್ಯರ್ಥಿಗಳಿಗೆ ಸರ್ಕಾರಿ ವಕೀಲರು ಹಾಗೂ 20 ವರ್ಷಗಳಿಗಿಂತ ಹೆಚ್ಚು ಅನುಭವ ಹೊಂದಿರುವ ವಕೀಲರ ಮಾರ್ಗದರ್ಶನದಲ್ಲಿ ಕಾನೂನು ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 5,000 ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರು ಎಸ್ಎಸ್ಎಲ್ಸಿ ಅಂಕಪಟ್ಟಿ, ಕಾನೂನು ಪದವಿಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು, ತಹಶೀಲ್ದಾರ್ ನೀಡಿದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಆಧಾರ್ ಕಾರ್ಡ್ ಹಾಗೂ ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸಿರುವ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಪೂರ್ಣ ಹಾಗೂ ಅವಧಿ ಮೀರಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಅಥವಾ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮೀರಿರಬಾರದು. ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸುವ ಅಂತಿಮ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು ಹಾಗೂ ಕಳೆದ ಎರಡು ವರ್ಷಗಳೊಳಗೆ ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಗುರುನಾನಕ್ ಝಿರಾದಿಂದ ಚಿಕ್ಕಪೇಟೆ ರಿಂಗ್ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಗುರುನಾನಕ ಝಿರಾದಿಂದ ಚೆಕ್ಪೇಟರಿಂಗ್ ರಸ್ತೆ ಬೀದರ್-585403, ಇಮೇಲ್- domwdbidar1@gmail.com, ದೂರವಾಣಿ ಸಂಖ್ಯೆ- 08482 295210ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.






