ಬೀದರ್ ಎಟಿಎಂ ದರೋಡೆ ಪ್ರಕರಣ; 19 ತಿಂಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳ ಬಂಧನ : ಎಸ್ಪಿ ಪ್ರದೀಪ್ ಗುಂಟಿ

ಬೀದರ್: ನಗರದ ಎಟಿಎಂ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಸುಮಾರು 83 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣದಲ್ಲಿ 19 ತಿಂಗಳ ಸತತ ಕಾರ್ಯಾಚರಣೆ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ವೈಶಾಲಿ ಜಿಲ್ಲೆಯ ದಾಮೋದರಪುರದಲ್ಲಿ ಕಾರ್ಯಾಚರಣೆ ನಡೆಸಿ ಅಲೋಕ್ ಕುಮಾರ್ (32) ಹಾಗೂ ಅಮನ್ ಕುಮಾರ್ (28) ಅವರನ್ನು ಬಂಧಿಸಲಾಗಿದೆ ಎಂದರು.
2025ರ ಜನವರಿ 16ರಂದು ಬೀದರ್ ನಗರದಲ್ಲಿ ಎಟಿಎಂ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಸುಮಾರು 83 ಲಕ್ಷ ರೂ. ದರೋಡೆ ಮಾಡಲಾಗಿತ್ತು. ಘಟನೆಯಲ್ಲಿ ಒಬ್ಬ ಎಟಿಎಂ ಸಿಬ್ಬಂದಿ ಮೃತಪಟ್ಟಿದ್ದರು. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿದ್ದು, 17 ರಾಜ್ಯಗಳು ಹಾಗೂ 56 ನಗರಗಳಿಗೆ ತೆರಳಿ ಆರೋಪಿಗಳ ಪತ್ತೆಗೆ ಪ್ರಯತ್ನಿಸಿದ್ದರು ಎಂದು ಎಸ್ಪಿ ತಿಳಿಸಿದರು.
ಆರೋಪಿಗಳಿಗೆ ಸಹಾಯ ಮಾಡಿದ ವ್ಯಕ್ತಿಯಿಂದ 2.83 ಲಕ್ಷ ರೂ. ನಗದು, 9 ಎಂಎಂ ಪಿಸ್ತೂಲ್, 104 ಜೀವಂತ ಗುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಮತ್ತಷ್ಟು ಶಸ್ತ್ರಾಸ್ತ್ರಗಳು ಹಾಗೂ ದರೋಡೆ ಹಣದ ಕುರಿತು ತನಿಖೆ ಮುಂದುವರಿದಿದೆ ಎಂದರು.
ಆರೋಪಿಗಳು ಬಳಸಿದ್ದ ಬೈಕ್ನ್ನು ಹೈದರಾಬಾದ್ನಲ್ಲಿ ಬಿಟ್ಟು ಹೋಗಿದ್ದರು. ಅದರ ಮೂಲ ಪತ್ತೆಹಚ್ಚಿದಾಗ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಫೈನಾನ್ಸ್ ಮೂಲಕ ಖರೀದಿಸಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆರೋಪಿಗಳ ಕುರಿತು ಪ್ರಮುಖ ಸುಳಿವು ಸಿಕ್ಕಿತ್ತು ಎಂದು ಹೇಳಿದರು.
ಈ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ, ಬೈಕ್ ಹಾಗೂ ಶಸ್ತ್ರಾಸ್ತ್ರ ಒದಗಿಸಿದ್ದ ಆರೋಪದ ಮೇಲೆ ನಿಹಾಲ್, ಬೇಬಿದೇವಿ, ಅಣ್ಣಾ ಹಾಗೂ ರಾಜು ಶರ್ಮಾ ಸೇರಿದಂತೆ ನಾಲ್ವರನ್ನು ಕಳೆದ ವರ್ಷ ಫೆಬ್ರವರಿ–ಮಾರ್ಚ್ನಲ್ಲಿ ಬಂಧಿಸಲಾಗಿತ್ತು. ಅವರು ಎರಡು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಬಂಧಿತ ಪ್ರಮುಖ ಆರೋಪಿ ಅಲೋಕ್ ಕುಮಾರ್ ವಿರುದ್ಧ ಸುಮಾರು 9 ಪ್ರಕರಣಗಳಿದ್ದು, ಅವುಗಳಲ್ಲಿ 3 ಕೊಲೆ ಪ್ರಕರಣಗಳಿವೆ. ಅಲೋಕ್ ಹಾಗೂ ಅಮನ್ ತೆಲಂಗಾಣ, ಉತ್ತರ ಪ್ರದೇಶ, ಬಿಹಾರ ಹಾಗೂ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 16 ಪ್ರಕರಣಗಳಲ್ಲಿ ಬೇಕಾಗಿದ್ದಾರೆ ಎಂದು ಎಸ್ಪಿ ತಿಳಿಸಿದರು.
ಆರೋಪಿಗಳ ಪತ್ತೆಗಾಗಿ ಪೊಲೀಸರು 365 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ್ದು, 108 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 6 ಜೈಲುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರನ್ನು ಅಪಹರಣಕಾರರೆಂದು ಭಾವಿಸಿ ಸ್ಥಳೀಯರು ಹಲ್ಲೆ ನಡೆಸಿದ್ದು, ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ ಎಂದು ತಿಳಿಸಿದರು.
ಪ್ರಕರಣದ ತನಿಖೆ ಮತ್ತು ಕಾರ್ಯಾಚರಣೆಯಲ್ಲಿ ಇದುವರೆಗೆ ಪೊಲೀಸರು ಸುಮಾರು 2.46 ಲಕ್ಷ ಕಿ.ಮೀ. ಪ್ರಯಾಣ ಮಾಡಿದ್ದಾರೆ ಎಂದು ಎಸ್ಪಿ ಪ್ರದೀಪ್ ಗುಂಟಿ ಮಾಹಿತಿ ನೀಡಿದರು. ಕಾರ್ಯಾಚರಣೆಯಲ್ಲಿ ಸಹಕರಿಸಿದ ಪೊಲೀಸ್ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅವರು ಧನ್ಯವಾದ ಸಲ್ಲಿಸಿದರು.






