Bidar | ಆ.8ರಂದು ಎಸ್ಐಆರ್ ನಮೂನೆ ಸ್ವೀಕೃತಿಗೆ ಕೊನೆ ದಿನ : ಡಿಸಿ ಶಿಲ್ಪಾ ಶರ್ಮಾ

ಬೀದರ್, ಆ.5: ಜಿಲ್ಲೆಯಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಅರ್ಹ ಮತದಾರರು ಎಣಿಕೆ ಪ್ರಕ್ರಿಯೆಯಿಂದ ಹೊರಗುಳಿಯದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಎಸ್ಐಆರ್ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಣಿಕೆ (ಎನುಮರೇಶನ್) ನಮೂನೆ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದ್ದು, ಅರ್ಹ ಮತದಾರರು ನಿಗದಿತ ಅವಧಿಯೊಳಗೆ ನಮೂನೆ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 12,12,993 ಮತದಾರರ (ಶೇ.82.97) ಮಾಹಿತಿಯ ಡಿಜಿಟೈಜೇಶನ್ ಪೂರ್ಣಗೊಂಡಿದೆ. ಬಿಎಲ್ಒಗಳು ಹಾಗೂ ಎಸ್ಐಆರ್ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅರ್ಹ ಮತದಾರರು ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಪ್ರದೇಶಗಳಲ್ಲಿ 30 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 31,780 ಮೃತರು, 22,556 ಗೈರಾದವರು, 1,63,235 ಶಾಶ್ವತವಾಗಿ ಸ್ಥಳಾಂತರಗೊಂಡವರು, 11,425 ಇತರೆ ಪ್ರಕರಣಗಳು ಹಾಗೂ 16,706 ನಕಲು ಮತದಾರರು ಸೇರಿದಂತೆ ಒಟ್ಟು 2,45,702 ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂದು ತಿಳಿಸಿದರು.
ಈ ಕುರಿತು ಎಲ್ಲಾ ವಿವರಗಳನ್ನು ಪ್ರತಿ ವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗುತ್ತಿದ್ದು, ಅರ್ಹ ಮತದಾರರ ಹೆಸರು ಕೈಬಿಟ್ಟಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಿತ ಬಿಎಲ್ಒಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.






