Bidar | ಎಸ್ಐಆರ್ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ: ಅಧಿಕಾರಿಗಳಿಗೆ ಡಾ.ಪಿ.ಎಸ್.ವಸ್ತ್ರದ್ ಸೂಚನೆ

ಬೀದರ್: ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಎಸ್ಐಆರ್ ಅರ್ಜಿ ಭರ್ತಿ ಕುರಿತು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಡಾ.ಪಿ.ಎಸ್.ವಸ್ತ್ರದ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವೀಪ್ ಅರಿವು ಕಾರ್ಯಕ್ರಮ ಹಾಗೂ ಎಸ್ಐಆರ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಶೇ.66ರಷ್ಟು ಎಸ್ಐಆರ್ ಡಿಜಿಟೈಸೇಶನ್ ಪೂರ್ಣಗೊಂಡಿದ್ದು, ಉಳಿದ ಶೇ.34ರಷ್ಟು ಪ್ರಗತಿಯನ್ನು 3ರಿಂದ 4 ದಿನಗಳಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಬಿಎಲ್ಒಗಳು ಹಾಗೂ ಮೇಲ್ವಿಚಾರಕರಿಗೆ ಅನುಕೂಲವಾಗುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿಸಿ ಹಿಂದಿರುಗಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಎಲ್ಲ ಕಾಲೇಜುಗಳಲ್ಲಿ ಎಲೆಕ್ಟೋರಲ್ ಲಿಟರಸಿ ಕ್ಲಬ್ಗಳನ್ನು (ELC) ಸ್ಥಾಪಿಸಲಾಗಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳು ಇದರಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ದೈಹಿಕ ಅಂಗವಿಕಲರು, ತೃತೀಯಲಿಂಗಿಗಳು ಹಾಗೂ ವೃದ್ಧಾಶ್ರಮಗಳಲ್ಲಿರುವವರಿಗೂ ಎಸ್ಐಆರ್ ಪ್ರಕ್ರಿಯೆ ತಲುಪುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ವಿವಿಧ ತರಬೇತಿಗಳನ್ನು ಆಯೋಜಿಸಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಶರಣಬಸಪ್ಪ ಕೊಟೆಪ್ಪಗೋಳ್, ಸ್ವೀಪ್ ಮಾಸ್ಟರ್ ಟ್ರೇನರ್ ಡಾ. ಗೌತಮ್ ಅರಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸ್ವೀಪ್ ಅರಿವು ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಹಿ ಆಂದೋಲನದಲ್ಲಿ ಎಲ್ಲರೂ ಸಹಿ ಮಾಡಿದರು.






