ಬೀದರ್ | ಔರಾದ್ ಅನ್ನು ಮಾದರಿ ಕ್ಷೇತ್ರವಾಗಿಸುವ ಸಂಕಲ್ಪ : ಪ್ರಭು ಚವ್ಹಾಣ

ಬೀದರ್ : ಔರಾದ್ ಕ್ಷೇತ್ರವನ್ನು ಮಾದರಿಯಾಗಿಸಲು ಸಂಕಲ್ಪ ತೊಟ್ಟಿದ್ದು, ಅದರಂತೆ ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ್ ಅವರು ಹೇಳಿದರು.
ಇಂದು ತಾಲ್ಲೂಕು ಆಡಳಿತ ವತಿಯಿಂದ ಆಡಳಿತ ಸೌಧದ ಆವರಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಔರಾದ್ ತಾಲ್ಲೂಕಿಗೆ ಕೈಗಾರಿಕೆಗಳು ತರಬೇಕೆಂಬುದು ಬಹಳ ದಿನಗಳ ಒತ್ತಾಸೆಯಾಗಿದೆ. ಈ ದಿಸೆಯಲ್ಲಿ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಸ್ತೆ, ವಿದ್ಯುತ್, ಕುಡಿಯುವ ನೀರಿನ ಪೂರೈಕೆಯ ಕೆಲಸಗಳು ನಡೆಯುತ್ತಿವೆ. ಮಾಳೆಗಾಂವ್ ನಲ್ಲಿ ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೋರೇಷನ್ನಿಂದ 163 ಎಕರೆ ಜಮೀನಿನಲ್ಲಿ 2,147 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಪವರ್ ಟ್ರಾನ್ಸ್ ಮಿಷನ್ ಸೆಂಟರ್ ನಿರ್ಮಾಣದ ಕೆಲಸ ನಡೆಯುತ್ತಿದೆ. ಇದರಿಂದಾಗಿ ಉದ್ಯೋಗ ಸೃಷ್ಟಿಯ ಜೊತೆಗೆ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ನಡೆಯಲಿವೆ ಎಂದರು.
ಸಂವಿಧಾನವು ದೇಶದ ಪವಿತ್ರ ಗ್ರಂಥವಾಗಿದೆ. ಇದರ ಆಧಾರದ ಮೇಲೆಯೇ ದೇಶ ನಡೆಯುತ್ತದೆ. ಸಂವಿಧಾನದ ಬಲದಿಂದಲೇ ಎಲ್ಲರೂ ಸಮಾನ ಅವಕಾಶಗಳನ್ನು ಪಡೆದು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ. ಹಾಗಾಗಿ ಎಲ್ಲರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಮಕ್ಕಳು ಸರಿಯಾಗಿ ಅಭ್ಯಾಸ ಮಾಡಿ ಐಎಎಸ್, ಐಪಿಎಸ್, ಡಾಕ್ಟರ್, ಇಂಜಿನಿಯರ್ ಅಂತಹ ಪ್ರಮುಖ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲು ನಾನು ಸಿದ್ಧನಿದ್ದೇನೆ. ನೀವು ಸಾಧಿಸುವತ್ತ ಗಮನ ಹರಿಸಿ ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸರುಬಾಯಿ ವೈಜಿನಾಥ ಘೂಳೆ, ಉಪಾಧ್ಯಕ್ಷೆ ರಾಧಾಬಾಯಿ ಕೃಷ್ಣ ನರೋಟೆ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಎಇಇ ವೆಂಕಟರಾವ್ ಶಿಂಧೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನೀಲ್ ಮೇಲ್ದೊಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸುಭಾಷ, ಉಪ ಖಜಾನಾಧಿಕಾರಿ ಮಾಣಿಕರಾವ್ ನೇಳಗೆ ಹಾಗೂ ಶಿಕ್ಷಕ ದತ್ತಾತ್ರಿ ಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಮುಖಂಡರು, ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.







