Bidar | ವೃದ್ಧಾಪ್ಯ, ವಿಧವೆ, ಅಂಗವಿಕಲರ ವೇತನ ಬಿಡುಗಡೆಗೆ ಡಿಎಸ್ಎಸ್ ಒತ್ತಾಯ

ಬೀದರ್: ಸರ್ಕಾರದಿಂದ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ನೀಡಲಾಗುತ್ತಿರುವ ಸಾಮಾಜಿಕ ಭದ್ರತಾ ವೇತನಗಳು ಹಲವು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದೇ ಇರುವುದರಿಂದ ಬಡ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶಿವರಾಜ್ ತಡಪಳ್ಳಿ ಒತ್ತಾಯಿಸಿದ್ದಾರೆ.
ಈ ಕುರಿತು ಬುಧವಾರ ಬೀದರ್ ತಹಸೀಲ್ದಾರರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ವೃದ್ಧಾಪ್ಯ ವೇತನ, ವಿಧವೆ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಹಣ ಫಲಾನುಭವಿಗಳ ಬ್ಯಾಂಕ್ ಹಾಗೂ ಅಂಚೆ ಖಾತೆಗಳಿಗೆ ಸಕಾಲದಲ್ಲಿ ಜಮೆಯಾಗುತ್ತಿಲ್ಲ ಎಂದು ದೂರಿದ್ದಾರೆ.
ಸಾವಿರಾರು ಬಡ ಕುಟುಂಬಗಳು ಈ ಯೋಜನೆಗಳ ಮೇಲೆ ಅವಲಂಬಿತವಾಗಿದ್ದು, ಪ್ರತಿ ತಿಂಗಳು ದೊರೆಯುವ ವೇತನದಿಂದಲೇ ಜೀವನ ನಿರ್ವಹಿಸುತ್ತಿವೆ. ಆದರೆ ವೇತನ ಬಿಡುಗಡೆ ವಿಳಂಬವಾಗುತ್ತಿರುವುದರಿಂದ ಫಲಾನುಭವಿಗಳು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.
ವೇತನದ ಮಾಹಿತಿ ಪಡೆಯಲು ಹಾಗೂ ಸಮಸ್ಯೆ ಪರಿಹರಿಸಿಕೊಳ್ಳಲು ವೃದ್ಧರು, ವಿಧವೆಯರು ಮತ್ತು ಅಂಗವಿಕಲರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ತಹಸೀಲ್ದಾರ್ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಫಲಾನುಭವಿಗಳ ಖಾತೆಗಳಿಗೆ ವೇತನವನ್ನು ನಿಯಮಿತವಾಗಿ ಹಾಗೂ ಸಕಾಲದಲ್ಲಿ ಜಮಾ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಜೊತೆಗೆ ಬಾಕಿ ಇರುವ ಎಲ್ಲಾ ವೇತನವನ್ನು ಕೂಡಲೇ ಬಿಡುಗಡೆಗೊಳಿಸಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಒಂದು ವೇಳೆ ವೇತನ ಬಿಡುಗಡೆ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದರೆ, ತಹಸೀಲ್ದಾರ್ ಕಚೇರಿ ಎದುರು ತಮಟೆ (ಹಲಗೆ) ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.






