ಬೀದರ್ | ಕನ್ನಡ ಸಂಸ್ಕೃತಿ ಉಳಿವಿಗೆ ಎಲ್ಲರ ಸಹಕಾರ ಅಗತ್ಯ: ಸಿದ್ರಾಮ್ ಶಿಂಧೆ

ಬೀದರ್ : ಜಿಲ್ಲೆಯಲ್ಲಿ ಸಂಸ್ಕೃತಿಯನ್ನು ಗಟ್ಟಿಯಾಗಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಶಿಂಧೆ ತಿಳಿಸಿದರು.
ನಗರದ ಡಾ. ಚೆನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಪ್ರಚಾರ ಕಾರ್ಯ ಸಮಿತಿ ಮಳಚಾಪೂರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಸಾಯಂಕಾಲ ಸಂಗೀತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಪ್ರಚಾರ ಕಾರ್ಯ ಸಮಿತಿಯು ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ವದ ಕಾರ್ಯ ಮಾಡುತ್ತಿದೆ. ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವಿವಿಧ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ್ ಸೊನಾರೆ ಅವರು ಮಾತನಾಡಿ, ಕಲಾವಿದರು ಸ್ವಾಭಿಮಾನಿಗಳಾಗಬೇಕು. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಗೌರವ ನೀಡಿದರೆ ಉತ್ತಮ ಬದುಕು ಸಾಧ್ಯವಾಗುತ್ತದೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ ಬೌದ್ಧ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಎಸ್.ಎಂ.ಜನವಾಡಕರ್ ಅವರು ಮಾತನಾಡಿ, ಮಾನವ ಹುಟ್ಟಿದ್ದಾಗಲೇ ಜಾನಪದವು ಜನ್ಮ ತಾಳಿದೆ. ಜಾನಪದವನ್ನು ಉಳಿಸಿ ಬೆಳೆಸುತ್ತಿರುವವರು ಗ್ರಾಮೀಣ ಭಾಗದ ಜನರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಮಾರು 12 ಸಾಂಸ್ಕೃತಿಕ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಕೋರಲಾಯಿತು. ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ರಮೇಶ ದೊಡ್ಡಿ ಮಳಚಾಪೂರ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ್ ಅತಿವಾಳೆ, ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಟ್ರಸ್ಟ್ ಅಧ್ಯಕ್ಷ ಎಂ.ಎಸ್. ಮನೋಹರ್, ಹಿರಿಯ ಸಾಹಿತಿ ರಾಮಚಂದ್ರ ಗಣಾಪೂರ್, ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ್ ಗೋರನಾಳಕರ್, ಮಳಚಾಪೂರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರು ರಾಮಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ತು ತಾಲೂಕಾಧ್ಯಕ್ಷ ಎಸ್.ಬಿ. ಕುಚಬಾಳ್ ಹಾಗೂ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ್ ಮಾಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.






