Bidar | ಬರಪೀಡಿತ ಪಟ್ಟಿಯಿಂದ ಕಮಲನಗರ ಕೈಬಿಟ್ಟಿರುವುದು ಖಂಡನೀಯ: ಪೂಜಾ ಬೆಲ್ಲೆ

ಬೀದರ್: ರಾಜ್ಯ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಬೀದರ್ ಜಿಲ್ಲೆಯ ಕಮಲನಗರ ತಾಲೂಕನ್ನು ಕೈಬಿಟ್ಟಿರುವುದು ರೈತಾಪಿ ವರ್ಗದಲ್ಲಿ ಆತಂಕ ಮೂಡಿಸಿದೆ ಎಂದು ಮದನೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂಜಾ ಬೆಲ್ಲೆ ಖಂಡಿಸಿದ್ದಾರೆ. ತಕ್ಷಣ ತಳಮಟ್ಟದಲ್ಲಿ ಮರುಸಮೀಕ್ಷೆ ನಡೆಸಿ ಕಮಲನಗರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಮಲನಗರ ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದ ಕೃಷಿ ಕ್ಷೇತ್ರ ಸಂಪೂರ್ಣವಾಗಿ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ನಿರೀಕ್ಷಿತ ಇಳುವರಿ ಬರುವ ಸಾಧ್ಯತೆ ಇಲ್ಲ. ಮುಂಗಾರಿನ ಪ್ರಮುಖ ಬೆಳೆಗಳಾದ ಹೆಸರು ಮತ್ತು ಉದ್ದು ಶೇ.100ರಷ್ಟು ನಾಶಗೊಂಡಿವೆ ಎಂದು ತಿಳಿಸಿದ್ದಾರೆ.
ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಸೋಯಾಬಿನ್ ಮತ್ತು ತೊಗರಿ ಕೂಡ ಸಂಪೂರ್ಣವಾಗಿ ಒಣಗಿ ನೆಲಕಚ್ಚಿವೆ. ಬೆಳೆ ನಷ್ಟದ ಜೊತೆಗೆ ತಾಲೂಕಿನಾದ್ಯಂತ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ತಾಲೂಕಿನ ರೈತರು ಸಂಕಷ್ಟದಲ್ಲಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಳಮಟ್ಟದಲ್ಲಿ ವಾಸ್ತವಿಕ ಸಮೀಕ್ಷೆ ನಡೆಸದೆ ಕಚೇರಿಯಲ್ಲಿ ಕುಳಿತು ಬೇಜವಾಬ್ದಾರಿ ವರದಿ ನೀಡಿದ್ದಾರೆ. ಅಧಿಕಾರಿಗಳ ಅಸಡ್ಡೆಯಿಂದ ಕಮಲನಗರಕ್ಕೆ ಬರ ಪರಿಹಾರ ದೊರೆಯದಂತಾಗಿದೆ ಎಂದು ಪೂಜಾ ಬೆಲ್ಲೆ ಆರೋಪಿಸಿದ್ದಾರೆ.
ಕಮಲನಗರ ತಾಲೂಕಿನಲ್ಲಿ ತಕ್ಷಣ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಂದ ತಳಮಟ್ಟದ ನೈಜ ಸಮೀಕ್ಷೆ ನಡೆಸಬೇಕು. ಬೆಳೆ ನಷ್ಟದ ಪ್ರಮಾಣವನ್ನು ಪರಿಗಣಿಸಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಸೂಕ್ತ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲದಿದ್ದರೆ ತಾಲೂಕಿನ ರೈತರನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗುವುದು ಎಂದು ಪೂಜಾ ಬೆಲ್ಲೆ ಎಚ್ಚರಿಕೆ ನೀಡಿದ್ದಾರೆ.






