ಬೀದರ್ | ಜಗತ್ತಿನಲ್ಲಿಯೇ ಭಾರತ ದೇಶ ಭಾವೈಕ್ಯತೆಗೆ ಹೆಸರಾಗಿದೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಜಗತ್ತಿನಲ್ಲಿಯೇ ಭಾರತ ದೇಶ ಭಾವೈಕ್ಯತೆಗೆ ಹೆಸರಾಗಿದೆ. ನಮ್ಮ ದೇಶದಲ್ಲಿ ಅನೇಕ ಧರ್ಮ, ಜಾತಿ, ಭಾಷೆ , ಸಂಸ್ಕೃತಿ, ಆಚಾರ, ವಿಚಾರಗಳಿದ್ದರೂ ಭಾವೈಕ್ಯತೆಯಿಂದ ಕೂಡಿ ಬಾಳುವುದನ್ನು ನೋಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ತಿರಂಗಾ ಯಾತ್ರೆ ಭಾವೈಕ್ಯತೆಯ ನಡಿಗೆ ಎಂಬ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆ ಎನ್ನುವುದು ದೇಶದ ಬಹು ದೊಡ್ಡ ಹಬ್ಬವಾಗಿದೆ. ಸ್ವಾತಂತ್ರ್ಯ ದಿನ ನಮ್ಮೆಲ್ಲರಲ್ಲಿ ಸಂತೋಷ, ಸಂಭ್ರಮ ಸಡಗರ ಮನೆ ಮಾಡುತ್ತದೆ. ಸರ್ವಜನಾಂಗದ ಶಾಂತಿಯ ತೋಟವನ್ನು ನಮ್ಮ ಬೀದರ್ ಜಿಲ್ಲೆಯಲ್ಲಿ ಕಾಣಬಹುದು. ಹಾಗೆಯೇ ಇಲ್ಲಿ ಶಾಂತಿ, ಸಹೋದರತೆ, ಸಹಬಾಳ್ವೆ ಕೂಡ ನೋಡಬಹುದು. ಭಾವ್ಯಕ್ಯತೆ ಗಟ್ಟಿಗೊಳ್ಳಲು ಹರ್ ಘರ್ ತಿರಂಗಾ ಯಾತ್ರೆಯು ಪೂರಕವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ಮಾತನಾಡಿ, ಎಲ್ಲರೂ ಭಾವೈಕ್ಯತೆಯಿಂದ ಈ ಭಾವೈಕ್ಯತೆಯ ನಡಿಗೆಯಲ್ಲಿ ಭಾಗವಹಿಸಿದ್ದು, ಬಹಳ ಸಂತೋಷದ ವಿಷಯವಾಗಿದೆ ಮತ್ತು ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಧನ್ಯವಾದ ಎಂದು ತಿಳಿಸಿದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಸ್.ಶ್ರೀಧರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೋಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಚನ್ನಶಟ್ಟಿ, ವಿಸಡಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಆಸಿಫುದ್ದಿನ್, ಉದ್ಯಮಿ ಮನಿಪ್ರೀತ್ ಸಿಂಗ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಾರ್ಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.







