ಬೀದರ್ | ಪಂಚ ಗ್ಯಾರಂಟಿಗಳನ್ನು ಸೂಕ್ತವಾಗಿ ಜನರಿಗೆ ತಲುಪಲಿ : ಅಮೃತರಾವ್ ಚಿಮಕೋಡೆ

ಬೀದರ್ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿಗಳು ಸೂಕ್ತವಾಗಿ ಜನರಿಗೆ ತಲುಪಲಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ 3,81,970 ಇವರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಆಗಸ್ಟ್ ತಿಂಗಳ ಅಂತ್ಯಕ್ಕೆ 3,55,304 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ತಿಂಗಳಿಗೆ 2 ಸಾವಿರ ರೂ. ನಂತೆ 1,382.49 ಕೋಟಿ ರೂ. ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ. ಐಟಿಜಿಎಸ್ಟಿ ಸಮಸ್ಯೆ ನಿವಾರಣೆ ಆದವರು ಮತ್ತೆ ಅರ್ಜಿ ಸಲ್ಲಿಸಲು ತಿಳಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿ 13,13,305 ಫಲಾನುಭವಿಗಳಿದ್ದು, 333.28 ಕೋಟಿ ರೂ. ಅನುದಾನ ಬಳಕೆಯಾಗಿದೆ. ಜುಲೈ 2023 ರಿಂದ ಜನವರಿ 2025ರ ವರಿಗೆ 5 ಕೆ.ಜಿ ಅಕ್ಕಿ ಮತ್ತು ಉಳಿದ 5 ಕೆ.ಜಿ ಅಕ್ಕಿಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿತ್ತು. ಆದರೆ, ಫೆಬ್ರವರಿ 2025 ರಿಂದ 10 ಕೆ.ಜಿ ಅಕ್ಕಿ ನೀಡಲಾಗುತ್ತಿದ್ದು, ಜುಲೈ ತಿಂಗಳಿಂದ ಅಕ್ಕಿ ಜೊತೆಗೆ ಜೋಳ ಸೇರಿಸಿ ಒಟ್ಟು 10 ಕೆ.ಜಿ ಆಹಾರ ಧಾನ್ಯ ನೀಡಲಾಗುತ್ತದೆ. ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು. ಕೆಲವು ಹಳ್ಳಿ ಮತ್ತು ತಾಂಡಾಗಳಲ್ಲಿ ನ್ಯಾಯ ಬೆಲೆ ಅಂಗಡಿ ಇಲ್ಲ ಬೇರೆ ಗ್ರಾಮಕ್ಕೆ ಹೋಗಿ ತರಬೇಕಾಗಿದೆ. ಜನರಿಗೆ ಇಂತಹ ತೊಂದರೆಯಾಗದಂತೆ ರೇಷನ್ ಉಪ ಕೇಂದ್ರ ಸ್ಥಾಪಿಸಿ, ರೇಷನ್ ನೀಡಬೇಕು. ಹಾಗೆಯೇ ಬಯೋಮೆಟ್ರಿಕ್ ತೆಗೆದುಕೊಂಡ ಕೂಡಲೇ ರೇಷನ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 12,196 ನೋಂದಣಿಯಾಗಿದ್ದು, ಅದರಲ್ಲಿ 11,900 ಪದವಿ ಅಭ್ಯರ್ಥಿ ಮತ್ತು 296 ಡಿಪ್ಲೋಮಾ ಅಭ್ಯರ್ಥಿ ಫಲಾನುಭವಿಗಳಿಗೆ 26.90 ಕೋಟಿ ರೂ. ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮತ್ತು ತಾಲ್ಲೂಕು ಮಟ್ಟದಲ್ಲೂ ಕೂಡ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಯುವನಿಧಿ ಪ್ಲಸ್ ಕಾರ್ಯಕ್ರಮ ಅಡಿ ತರಬೇತಿ ನೀಡಲು ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಪದವಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಸಿದವರ ಪಟ್ಟಿ ಪಡೆದು ಯುವನಿಧಿ ಯೋಜನೆಯಡಿ ನೋಂದಣಿಯಾಗುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 3,53,011 ಫಲಾನುಭವಿಗಳಿದ್ದು, 410.52 ಕೋಟಿ ರೂ. ಬಳಕೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಜೂ.11, 2023 ರಿಂದ ಅ.12, 2025ರ ವರಿಗೆ ಮಹಿಳಾ ಮತ್ತು ಬಾಲಕಿಯರು ಒಟ್ಟು ಸೇರಿ 9.74 ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ. ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.14 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಇದಕ್ಕಾಗಿ 283.84 ಕೋಟಿ ರೂ. ಸಂದಾಯವಾಗಿದೆ. ಪ್ರತಿ ದಿನ ಪ್ರಯಾಣಿಕರಿಂದ ಸರಾಸರಿ 33.24 ಲಕ್ಷ ರೂ. ಸಾರಿಗೆ ಆದಾಯವಾಗುತ್ತಿದೆ. ಕಳೆದ ಸಭೆಯ ಬೇಡಿಕೆಯಂತೆ ಬಸ್ ಸಮಸ್ಯೆ ಇರುವ ಕಡೆಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ್ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಎಮ್.ಎಚ್, ಜೆಸ್ಕಾಂ ಅಧಿಕಾರಿಗಳು, ಕೆ ಕೆ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ಸದಸ್ಯರು ಉಪಸ್ಥಿತರಿದ್ದರು.







