ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು: ವೀರಶೆಟ್ಟಿ ಚನ್ನಶೆಟ್ಟಿ

ಬೀದರ್ : ಶಾಲಾ ಆವರಣ ಹಾಗೂ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ ಅವರು ಕರೆ ನೀಡಿದರು.
ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯವರ ಸಂಯುಕ್ತಾಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ವಿಶೇಷ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಮಲೇರಿಯಾ, ಆನೆಕಾಲು, ಡೆಂಗ್ಯೂ, ಚಿಕನ್ಗುನ್ಯ ಕುರಿತು ತಿಳಿಸುತ್ತಾ, ಮಲೇರಿಯಾ ಜ್ವರವು ಹೆಣ್ಣು ಅನಾಫಿಲಿಸ್ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಈ ಸೊಳ್ಳೆಗಳು ಹೆಚ್ಚಾಗಿ ಸ್ವಚ್ಛ ಹಾಗೂ ನಿಂತ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಜೂನ್ ತಿಂಗಳನ್ನು ಮಲೇರಿಯಾ ಮಾಸಾಚರಣೆ ಎಂದು ಆಚರಿಸಲಾಗುತ್ತಿದ್ದು, ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಲ್ಲಿ ರೋಗದ ಬಗ್ಗೆ ಮುನ್ನೆಚ್ಚರಿಕೆ ಜಾಗೃತಿ ವಹಿಸಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಮ್ಮದ್ ಮಹೆಬೂಬ್ ಮಿಯ್ಯಾ ಅವರು ಮಾತನಾಡಿ, ಸೊಳ್ಳೆಗಳ ಉತ್ಪತ್ತಿ ತಾಣಗಳಾದ ತೆರೆದ ಟ್ಯಾಂಕ್ಗಳು, ಹಳೆಯ ಟೈರ್ಗಳು, ಪ್ಲಾಸ್ಟಿಕ್ ಕಪ್ಗಳು ಹಾಗೂ ಕುಂಡಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ತೀವ್ರ ಜ್ವರ, ನಡುಕ, ಚಳಿ ಮತ್ತು ತಲೆ ನೋವು ಮಲೇರಿಯಾದ ಪ್ರಮುಖ ಲಕ್ಷಣಗಳಾಗಿದ್ದು, ಇಂತಹ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ರಕ್ತ ಪರೀಕ್ಷೆ ಹಾಗೂ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸಮಿಯೊದಿನ್, ಶಾಲೆಯ ಮುಖ್ಯಗುರು ರಾಘವೇಂದ್ರ ಕುಲಕರ್ಣಿ, ಸಹ ಶಿಕ್ಷಕ ರವೀಂದ್ರ ಹೊಗಾಡೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ರಾಜಕುಮಾರ್ ಗಾದಗಿ, ಸೂರ್ಯಕಾಂತ್ ಸಿಂದಬಂದಗಿ, ಅಶ್ವಿನಿ, ಶ್ರೀದೇವಿ ಹಾಗೂ ಶಶಿಕಾಂತ್ ಬಿರಾದಾರ್ ಸೇರಿದಂತೆ ಆರೋಗ್ಯ ಇಲಾಖೆಯ ಮೇಲ್ವಿಚಾರಕರು, ಆರೋಗ್ಯ ಕಾರ್ಯಕರ್ತೆಯರು, ಶಾಲೆಯ ಮಕ್ಕಳು ಉಪಸ್ಥಿತರಿದ್ದರು.






