Bidar | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬೀದರ್ : ಜಿಲ್ಲಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ, ಕೊಲೆ ಹಾಗೂ ಜಾತಿ ನಿಂದನೆ ಪ್ರಕರಣಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶಹಾಗಂಜ್ ಬೌದ್ಧ ವಿಹಾರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತ, ಭಗತ್ ಸಿಂಗ್ ವೃತ್ತ, ತಹಶೀಲ್ದಾರ್ ಕಚೇರಿ ಹಾಗೂ ಶಿವಾಜಿ ವೃತ್ತದ ಮೂಲಕ ಅಂಬೇಡ್ಕರ್ ವೃತ್ತ ತಲುಪಿತು. ಮೆರವಣಿಗೆಯುದ್ದಕ್ಕೂ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಂಕುಶ್ ಗೋಖಲೆ, ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ಕೊಲೆ ಹಾಗೂ ಜಾತಿ ನಿಂದನೆ ಪ್ರಕರಣಗಳು ನಡೆಯುತ್ತಿದ್ದು, ಭಾಲ್ಕಿ ತಾಲೂಕಿನಲ್ಲಿ ಇಂತಹ ಘಟನೆಗಳು ಹೆಚ್ಚಾಗಿವೆ ಎಂದು ಆರೋಪಿಸಿದರು.
ಚಳಕಾಪುರ ಹಾಗೂ ರಾಚಪ್ಪ ಗೌಡಗಾಂವ್ ಗ್ರಾಮಗಳ ಘಟನೆಗಳನ್ನು ಉಲ್ಲೇಖಿಸಿದ ಅವರು, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಹೋರಾಟಗಾರರ ವಿರುದ್ಧ ಮಾತನಾಡುವ ಕೆಲ ದಲಿತ ಮುಖಂಡರನ್ನೂ ಟೀಕಿಸಿದ ಅವರು, ಸಮಾಜದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು ಎಂದು ಹೇಳಿದರು.
ಹಿರಿಯ ಹೋರಾಟಗಾರ ವೈಜೀನಾಥ್ ಸೂರ್ಯವಂಶಿ ಮಾತನಾಡಿ, ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ವಿನೋದ್ ರತ್ನಾಕರ್ ಮಾತನಾಡಿ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆದಿವೆ ಎಂದು ಆರೋಪಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವಿರುದ್ಧ ತನಿಖೆ ನಡೆಸಿ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ, ಬೀದರ್ ಜಿಲ್ಲೆಯಲ್ಲಿ ಡಿಜಿಪಿ ಮತ್ತು ಐಜಿಪಿ ನೇತೃತ್ವದಲ್ಲಿ ಉನ್ನತ ಮಟ್ಟದ ಪೊಲೀಸ್ ತನಿಖಾ ಸಮಿತಿ ರಚಿಸಬೇಕು, ಕಳೆದ ಐದು ವರ್ಷಗಳ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಸಮಗ್ರ ಪರಿಶೀಲನೆ ನಡೆಸಬೇಕು ಹಾಗೂ ಸಂತ್ರಸ್ತರು ಮತ್ತು ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಲಾಗಿದೆ.
ಬೆಳಕುಣಿ ಪ್ರಕರಣದಲ್ಲಿ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಮರುಪರಿಶೀಲಿಸಬೇಕು. ಬಡವರು ಹಾಗೂ ದಲಿತರ ಭೂಮಿಗೆ ಸಂಬಂಧಿಸಿದ ದೂರುಗಳನ್ನು ತನಿಖೆ ನಡೆಸಿ, 30 ದಿನಗಳೊಳಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಲಿಖಿತ ಮಾಹಿತಿ ನೀಡಬೇಕು ಎಂದು ಒಕ್ಕೂಟ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ರಾಜಕುಮಾರ್ ಮೂಲಭಾರತಿ, ಕಪೀಲ್ ಗೋಡಬೋಲೆ, ರಾಹುಲ್ ಖಂದಾರೆ, ರವಿಕುಮಾರ್ ವಾಘಮಾರೆ, ರಾಹುಲ್ ದಲಾಲೆ, ಗೌತಮ್ ಚವ್ವಾಣ, ಪ್ರದೀಪ್ ಭಾವಿಕಟ್ಟಿ, ರಾಜಕುಮಾರ್ ಸಿಂಧೆ, ಅಂಬಾದಾಸ್ ಚಕ್ರವರ್ತಿ, ಶಕ್ತಿಕಾಂತ್ ಭಾವಿದೊಡ್ಡಿ, ಜ್ಞಾನೇಶ್ವರ್ ಸಿಂಗಾರೆ, ಮಹೇಶ್ ಭೋಲಾ, ರವಿ ಭೂಸಂಡೆ, ರಾಜಕುಮಾರ್ ಗುನ್ನಳ್ಳಿ, ಪ್ರಕಾಶ್ ಹಳ್ಳಿಖೇಡ್, ಹರ್ಷಿತ್ ದಾಂಡೆಕರ್, ಮಲ್ಲಿಕಾರ್ಜುನ್ ಕೌಠಾ, ವಿಲಾಸ್ ಎ.ಮೋರೆ, ಗೌತಮ್ ಬಗದಲ್, ಬಸವರಾಜ್ ಮೇತ್ರೆ ಸೇರಿದಂತೆ ನೂರಾರು ಮಹಿಳೆಯರು ಮತ್ತು ಇತರರು ಭಾಗವಹಿಸಿದ್ದರು.






