Bidar | ಲೋಕ ಅದಾಲತ್ನಲ್ಲಿ 74 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ : 43.28 ಕೋಟಿ ರೂ. ಪರಿಹಾರ

ಬೀದರ್: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು.11ರಂದು ಆಯೋಜಿಸಿದ್ದ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ 74,056 ಪ್ರಕರಣಗಳನ್ನು ಇತ್ಯರ್ಥಪಡಿಸಿ 43,28,36,872 ರೂ. ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ. ರಹಮಾನ್ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯೆ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 9,416 ಪ್ರಕರಣಗಳನ್ನು ಇತ್ಯರ್ಥಪಡಿಸಿ 13,57,57,791 ರೂ. ಮೊತ್ತದ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.
ಇದಲ್ಲದೆ, 64,640 ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ 29,70,79,081 ರೂ. ಮೊತ್ತದ ಪರಿಹಾರವನ್ನು ಕಕ್ಷಿದಾರರಿಗೆ ನೀಡಲಾಗಿದೆ. 10 ಹಿರಿಯ ನಾಗರಿಕರ ಪ್ರಕರಣಗಳಿಗೂ ಇತ್ಯರ್ಥ ಕಂಡುಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 92 ಲಕ್ಷ ರೂ. ಮೌಲ್ಯದ ಒಂದು ಪ್ರಕರಣವನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜಿ ಸಂಧಾನದಿಂದ ಒಂದಾದ 8 ದಂಪತಿಗಳು :
ರಾಷ್ಟ್ರೀಯ ಬೃಹತ್ ಲೋಕ ಅದಾಲತ್ನಲ್ಲಿ 8 ವೈವಾಹಿಕ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ದಂಪತಿಗಳನ್ನು ಮತ್ತೆ ಒಂದಾಗಿಸಲಾಗಿದೆ. ಇದರಲ್ಲಿ ಔರಾದ್ನ 3, ಹುಮನಾಬಾದ್ನ 3, ಬಸವಕಲ್ಯಾಣದ 1 ಹಾಗೂ ಬೀದರ್ನ 1 ಪ್ರಕರಣ ಸೇರಿವೆ.
ಜುಲೈ 18ರಂದು ಎನ್.ಐ. ಆಕ್ಟ್ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸಿಬ್ಬಂದಿಗಳಾದ ಜಗದೀಶ್ವರ್ ದೊರೆ, ಆಕಾಶ್ ಸಜ್ಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.






