Bidar | ಸಿದ್ದರಾಮಯ್ಯರ ಪ್ರತಿಮೆ ತೆರವು : ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ್ : ಕಲಬುರಗಿ ನಗರದ ಸಿದ್ದರಾಮಯ್ಯ ವೃತ್ತದಲ್ಲಿ ಅಭಿಮಾನಿಗಳು ಪ್ರತಿಷ್ಠಾಪಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನಲ್ಲಿ ತೆರವುಗೊಳಿಸಿರುವುದನ್ನು ಖಂಡಿಸಿ, ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆ, ಅಭಿಮಾನಿಗಳು ಪ್ರೀತಿ ಮತ್ತು ಗೌರವದಿಂದ ಸ್ಥಾಪಿಸಿದ್ದ ಪ್ರತಿಮೆಯನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿರುವುದು ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮನವಿಯಲ್ಲಿ, ಎರಡು ಬಾರಿ ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಜಾರಿಗೆ ಶ್ರಮಿಸಿರುವ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಉಲ್ಲೇಖಿಸಲಾಗಿದೆ.
ಸರ್ಕಾರ ಈ ವಿಷಯದಲ್ಲಿ ತಕ್ಷಣ ಮಧ್ಯಪ್ರವೇಶಿಸಿ, ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಅದೇ ರೀತಿ, ನಿಯಮಾನುಸಾರ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅದೇ ಸ್ಥಳದಲ್ಲಿ ಮರುಪ್ರತಿಷ್ಠಾಪಿಸಲು ಅವಕಾಶ ಕಲ್ಪಿಸಬೇಕು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಲೋಕೇಶ್ ಎಂ. ಮರ್ಜಾಪುರ್, ಗೌರವಾಧ್ಯಕ್ಷ ಶಿವರಾಜ್ ಮಲ್ಕಾಪುರೆ, ಉಪಾಧ್ಯಕ್ಷ ಶಿವು ಚಿಮಕೋಡ್, ಕಾರ್ಯದರ್ಶಿ ರಾಜ್ ಟಗರು ಆಣದೂರ್, ಆಪ್ತ ಕಾರ್ಯದರ್ಶಿ ಕುಮಾರ್ ನಿಜಾಂಪುರ್, ಗೊಂಡ ಸಮಾಜದ ಹಿರಿಯ ಮುಖಂಡ ರವಿ ದುರ್ಗೆ, ತುಕಾರಾಂ ಔದತಪುರ್, ನರಸಪ್ಪ ಯಾಕತಪುರ್ ಹಾಗೂ ರಮೇಶ್ ಭಾಗ್ಯನಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






