Bidar | ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಡಾ.ಎಸ್.ವಿ.ಪಾಟೀಲ್

ಬೀದರ್: ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಸಾಮಾಜಿಕ ಜವಾಬ್ದಾರಿ ಹಾಗೂ ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೀದರ್ ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ. ಎಸ್.ವಿ. ಪಾಟೀಲ್ ಹೇಳಿದರು.
ನಗರದ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಶನಿವಾರ ಡಾ. ಮಹಾಂತ್ ಶಿವಯೋಗಿಗಳ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಮನಃಪರಿವರ್ತನೆ ತರಲು ಡಾ. ಮಹಾಂತ್ ಶಿವಯೋಗಿಗಳು ‘ಮಹಾಂತ ಜೋಳಿಗೆ’ ಎಂಬ ವಿಶಿಷ್ಟ ಪರಿಕಲ್ಪನೆಯ ಮೂಲಕ ದೇಶ-ವಿದೇಶಗಳಲ್ಲಿ ಜನರನ್ನು ದುಶ್ಚಟಗಳಿಂದ ಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಹೇಳಿದರು.
ಜೋಳಿಗೆಯನ್ನು ಹಿಡಿದು ಗ್ರಾಮ-ನಗರ ಸೇರಿದಂತೆ ರಾಜ್ಯಾದ್ಯಂತ ಸಂಚರಿಸಿ ಸಾವಿರಾರು ಜನರ ದುಶ್ಚಟಗಳನ್ನು ಭಿಕ್ಷೆಯ ರೂಪದಲ್ಲಿ ಸ್ವೀಕರಿಸಿದ್ದರು. ಅವರ ಪ್ರೇರಣೆಯಿಂದ ಅನೇಕರು ಮದ್ಯಪಾನ, ಬೀಡಿ, ಸಿಗರೇಟ್ ಸೇರಿದಂತೆ ವಿವಿಧ ದುಶ್ಚಟಗಳನ್ನು ತ್ಯಜಿಸಿ ಹೊಸ ಜೀವನ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಯುವ ಸಮುದಾಯವು ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುವುದರಿಂದ ಪ್ರತಿಯೊಬ್ಬರೂ ಡಾ. ಮಹಾಂತ್ ಶಿವಯೋಗಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
“ಮಹಾತ್ಮರ ದಿನಾಚರಣೆಗಳನ್ನು ಆಚರಿಸುವುದಷ್ಟೇ ಸಾಲದು. ಅವರು ನುಡಿದಂತೆ ನಡೆದು ತೋರಿಸಿದಾಗ ಮಾತ್ರ ಇಂತಹ ಆಚರಣೆಗಳಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ” ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಮಹಾವಿದ್ಯಾಲಯದ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕಾ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ಡಾ.ವಿಜಯ ಮಹಾಂತೇಶ್, ಡಾ.ರಮೇಶ್ ನಾಯಕ್, ಡಾ.ರಾಜಕುಮಾರ್ ಎಂ., ವಿದ್ಯಾರ್ಥಿ ಕಲ್ಯಾಣ ಸಹಾಯಕ ನಿರ್ದೇಶಕರು, ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ವಿದ್ಯಾ ಪ್ರಾರ್ಥಿಸಿದರು. ವಿಜಯಲಕ್ಷ್ಮೀ ವಂದಿಸಿದರು. ಸುಪ್ರೀಯ ಸ್ವಾಗತಿಸಿ, ನಿರೂಪಿಸಿದರು.






