Bidar | ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಿಸಲು ಕಾರ್ಯನಿರ್ವಹಿಸಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕುನ್ಗುನ್ಯಾ ಸೇರಿದಂತೆ ರೋಗವಾಹಕ ಆಶ್ರಿತ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2027ರೊಳಗೆ ಜಿಲ್ಲೆಯನ್ನು ಮಲೇರಿಯಾ, ಡೆಂಗ್ಯೂ, ಚಿಕುನ್ಗುನ್ಯಾ, ಆನೆಕಾಲು ರೋಗ, ಮೆದುಳು ಜ್ವರ ಹಾಗೂ ಝಿಕಾ ವೈರಸ್ ಸೋಂಕಿನಿಂದ ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ವಾರಕ್ಕೊಮ್ಮೆ ಲಾರ್ವಾನಾಶಕ ದ್ರಾವಣ ಸಿಂಪಡಣೆ ಕಡ್ಡಾಯವಾಗಿ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಗುಂಡಿ, ತಗ್ಗುಗಳನ್ನು ಮುಚ್ಚಿ ನೀರು ಸಂಗ್ರಹವಾಗದಂತೆ ತಡೆಯಬೇಕು. ಕೊಳವೆಬಾವಿ ಹಾಗೂ ಸಾರ್ವಜನಿಕ ನಲ್ಲಿಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ಭದ್ರವಾಗಿ ಮುಚ್ಚಿ, ನೀರು ಸರಬರಾಜಿಗೂ ಮುನ್ನ ಅಗತ್ಯ ಪ್ರಮಾಣದಲ್ಲಿ ಕ್ಲೋರಿನೇಷನ್ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸಬೇಕು. ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಾಲೆ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದರು. ಬಸ್ ಡಿಪೋಗಳಲ್ಲಿ ಹಳೆಯ ಟೈರ್ಗಳು ಹಾಗೂ ಬಿಡಿಭಾಗಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 14 ಐಸಿಟಿಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಚ್ಐವಿ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕಿತರು ಬ್ರೀಮ್ಸ್ ಆಸ್ಪತ್ರೆಯ ಆಪ್ತ ಸಮಾಲೋಚನಾ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಮತ್ತು ಸಲಹೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಭೆಯಲ್ಲಿ ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಕಲ್ ಜೈನ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸುರ್ಯಾಕಾಂತ್ ಬಿರಾದಾರ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ್ ನಿರಗೂಡೆ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






