ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಲು ಒತ್ತಾಯ

ಬೀದರ್: ಬೆಂಗಳೂರಿನ ಲಾಲ್ಬಾಗ್ ಪ್ರದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 250 ಅಡಿ ಎತ್ತರದ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ಭೀಮ್ ಸೇನಾ ಸಂಘಟನೆ ಒತ್ತಾಯ ಮಾಡಿದೆ.
ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆಯ ಮುಖಂಡರು, ಕರ್ನಾಟಕದ ನೆರೆ ಹೊರೆ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ಬೆಂಗಳೂರಿನ ಲಾಲ್ಬಾಗ್ ನಲ್ಲಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ನೆರೆ ರಾಜ್ಯಗಳಲ್ಲಿ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ ನಿರ್ಮಿಸಿದ್ದಾರೆ. ಇಲ್ಲಿ ಜನಪರವಿರುವ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ. ಈ ಜನಪರ ಸರಕಾರ ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಿ, ಅದರ ಕೆಳಗಡೆ ಒಂದು ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸಂವಿಧಾನ ಬರೆದು ಎಲ್ಲರಿಗೂ ಸಮಾನತೆ ಒದಗಿಸಿದ್ದಾರೆ. ಈ ವರ್ಷದ ಬಜೆಟ್ ನಲ್ಲಿ ಈ ಬೃಹತ್ ಪ್ರತಿಮೆಯ ಬಗ್ಗೆ ಪ್ರಸ್ತಾವನೆ ಮಾಡಿ ಬರುವ ಏಪ್ರಿಲ್ ತಿಂಗಳ ಒಳಗಡೆ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಷ್ಣುವರ್ಧನ್ ವಾಲ್ದೊಡ್ಡಿ, ರವಿ ಮೊರೆ, ವಿಜಯ ಕುಮಾರ್ ಭಾವಿಕಟ್ಟಿ, ಗೌತಮ್ ಪ್ರಸಾದ್ ಹಾಗೂ ಹರ್ಷಿತ್ ದಾಂಡೇಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.







