ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು : ಯು.ನಿಸಾರ್ ಅಹ್ಮದ್

ಬೀದರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ಕಾಳಜಿ ನೀಡುವಂತೆ ಅಲ್ಪಸಂಖ್ಯಾತರ ಅಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಅವರು ಸೂಚಿಸಿದರು.
ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ವಿವಿಧ ಸಮುದಾಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಸ್ಲಿಂ ಹಾಗೂ ಸಿಖ್ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ ಸಮುದಾಯದ ಮಕ್ಕಳು ಶಾಲೆಯಿಂದ ಹೆಚ್ಚು ಹೊರಗುಳಿದವರಾಗಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ನೀಡುವಂತೆ ತಿಳಿಸಿದರು.
2011ರ ಜನಗಣತಿ ಪ್ರಕಾರ ಶೇ.43 ರಷ್ಟು ಮುಸ್ಲಿಂ ಜನಸಂಖ್ಯೆ ಅಶಿಕ್ಷಿತರಾಗಿದ್ದು, ಶೇ.15 ರಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಸಮೀಕ್ಷೆ ಪ್ರಕಾರ ಶೇ.6 ರಷ್ಟು ಮಕ್ಕಳು 10ನೇ ತರಗತಿಗೆ ದಾಖಲಾಗಿದ್ದಾರೆ. ಡಿಡಿಪಿಐ, ಮಹಿಳಾ ಮಕ್ಕಳ ಅಧಿಕಾರಿಗಳು, ಸಮಗ್ರ ಶಿಕ್ಷಣ ಯೋಜನೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.
ಅಂಗನವಾಡಿಯಿಂದ ಪ್ರಾಥಮಿಕ ಶಾಲೆಗೆ ಮಕ್ಕಳು ಕಡ್ಡಾಯವಾಗಿ ದಾಖಲಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈ ಬಗ್ಗೆ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.
ಬೀದರ್ ಜಿಲ್ಲೆಯ ಬಿದರಿ ಕಲೆ, ಗೋಮಿತ್ರಿ ಸೀರೆ ನೇಕಾರರು ಹಾಗೂ ಸಿಕ್ಕಲಗಾರರ ಸಮುದಾಯದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಶೀಘ್ರವೇ ಯೋಜನಾ ವರದಿಯೊಂದು ರೂಪಿಸಿ ಆಯೋಗಕ್ಕೆ ಕಳುಹಿಸುವಂತೆ ಅವರು ತಿಳಿಸಿದರು.
ಬಿದರಿ ಕಲೆಯನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಲು ಸಾಕಷ್ಟು ಅವಕಾಶವಿದ್ದು, ಈ ನಿಟ್ಟಿನಲ್ಲಿ 6 ತಿಂಗಳ ವಿಶೇಷ ಕೋರ್ಸ್ ಒದಗಿಸುವ ಯೋಜನೆಯನ್ನು ಆಯೋಗದಿಂದ ಆರಂಭಿಸುವ ಬಗ್ಗೆ ಚಿಂತಿಸಲಾಗುವುದು. ಬಸವಕಲ್ಯಾಣದಲ್ಲಿ ಗೋಮಿತ್ರಿ ಸೀರೆಗಳನ್ನು (ಜರದೋಜಿ) ನೇಯುವ ಅಲ್ಪಸಂಖ್ಯಾತರ ನೇಕಾರರ ಸಮುದಾಯವಿದ್ದು, ಅವರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ, ಕಾರ್ಪೋರೇಶನ್ ಕೌಶಲ್ಯ ಅಭಿವೃದ್ಧಿ ಅಧಿಕಾರಿ, ಜವಳಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಒಟ್ಟಾಗಿ ಸೇರಿ ಬಿದರಿ, ಗೋಮಿತ್ರಿ ಹಾಗೂ ಸಿಕ್ಕೆಲಗಾರ ಕ್ಲಸ್ಟರ್ ನಿರ್ಮಿಸಲು ಯೋಜನೆ ನಿರ್ಮಿಸಿದಲ್ಲಿ ಮುಂಬರುವ ಬಜೆಟ್ ನಲ್ಲಿ ವಿಶೇಷ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ವಿವಿಧ ಸದಸ್ಯರು ಹಾಗೂ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.







