ಹುಲಸೂರ್ | ವಾರ್ತಾಭಾರತಿಯ ವರದಿಗೆ ಸಿಎಂ ಕಚೇರಿಯಿಂದ ಸ್ಪಂದನೆ : ಅಂಗನವಾಡಿ ಶೌಚಾಲಯ ದುರಸ್ತಿಗೆ ಕ್ರಮ

ಹುಲಸೂರ್: ಕೇಸರ ಜವಳಗಾ ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಮೇ. 7ರಂದು ಪ್ರಕಟವಾದ ವರದಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆ ದೊರೆತಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಕೇಸರ ಜವಳಗಾ ಗ್ರಾಮದ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯ; ಶೌಚಕ್ಕೆ ಬಯಲೇ ಗತಿ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಜಿಲ್ಲಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಭಾಲ್ಕಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೇಸರ ಜವಳಗಾ ಗ್ರಾಮದ ಎ ಹಾಗೂ ಬಿ ಅಂಗನವಾಡಿ ಕೇಂದ್ರಗಳ ಶೌಚಾಲಯಗಳು ಮಳೆ ಹಾಗೂ ಸಾರ್ವಜನಿಕರ ಬಳಕೆಯಿಂದ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.
2026-27ನೇ ಸಾಲಿನ ಅನುದಾನದಲ್ಲಿ ಶೌಚಾಲಯ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳಿಗೆ ಮೀಸಲು ಕಲ್ಪಿಸಲಾಗಿದ್ದು, ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಸಮಸ್ಯೆಯನ್ನು ಬೆಳಕಿಗೆ ತಂದ ವರದಿ ಬಳಿಕ ಅಧಿಕಾರಿಗಳು ಸ್ಪಂದಿಸಿರುವುದಕ್ಕೆ ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಘೋಷಿತ ಕಾಮಗಾರಿಗಳು ಶೀಘ್ರ ಕಾರ್ಯರೂಪಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ.






