ಹುಲಸೂರ್ | ಎಸ್ಐಆರ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಿ.ಕೆ.ಸಿದ್ರಾಮ್

ಹುಲಸೂರ್ : ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಡಿ.ಕೆ. ಸಿದ್ರಾಮ್ ಹೇಳಿದರು.
ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಬುಧವಾರ ಎಸ್ಐಆರ್ ಎಣಿಕೆ ನಮೂನೆಯನ್ನು ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರನ್ನು ಪರಿಶೀಲಿಸಿ, ಎಣಿಕೆ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿದಾಗ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಅಗತ್ಯ ಮಾಹಿತಿಯನ್ನು ನಿಖರವಾಗಿ ನೀಡಿ ಸಹಕರಿಸಿದರೆ ದೋಷರಹಿತ ಹಾಗೂ ನವೀಕರಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುಂಡಪ್ಪ ಬಿರಾದರ್ ಹಾಗೂ ಪ್ರತಾಪ್ ಸಿಂಗ್ ಠಾಕೂರ್ ಉಪಸ್ಥಿತರಿದ್ದರು.




