ಹುಲಸೂರ್ | ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಇಂದಿನ ಅಗತ್ಯ: ತಹಶೀಲ್ದಾರ್ ಶಿವಾನಂದ್ ಮೇತ್ರೆ

ಹುಲಸೂರ್, ಆ.1: ವ್ಯಸನದ ವಿರುದ್ಧ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದೇ ಇಂದಿನ ಅಗತ್ಯವಾಗಿದೆ ಎಂದು ತಹಶೀಲ್ದಾರ್ ಶಿವಾನಂದ್ ಮೇತ್ರೆ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಡಾ. ಮಹಂತ ಶಿವಯೋಗಿ ಅವರ ಜಯಂತಿಯನ್ನು ವ್ಯಸನಮುಕ್ತ ದಿನಾಚರಣೆಯಾಗಿ ಆಚರಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದರ ಜೊತೆಗೆ ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಯುವಜನರು ಮಾದಕ ವಸ್ತುಗಳು ಸೇರಿದಂತೆ ಎಲ್ಲ ರೀತಿಯ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಡಾ. ಮಹಂತ ಶಿವಯೋಗಿ ಅವರ ಸಾಮಾಜಿಕ ಹಾಗೂ ಆಧ್ಯಾತ್ಮಿಕ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಸರ್ಕಾರದ ನಿರ್ದೇಶನದಂತೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪ್ರತಿಜ್ಞಾ ಕಾರ್ಯಕ್ರಮವೂ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಾನಂದ್ ಮೇತ್ರೆ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಸುನೀಲಕುಮಾರ್ ಸಜ್ಜನಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುಧೀರ್ ಕಾಡಾದಿ, ಕಾಶಿನಾಥ್, ಅಶ್ವತ್ಥ್, ಸುಧೀರ್ ಬಲ್ಲೂರೆ, ಅಮಿತ್ ಪಾಲಾಪುರೆ ಹಾಗೂ ಬಸಪ್ಪ ಚೌರೆ ಸೇರಿದಂತೆ ತಾಲ್ಲೂಕು ಕಚೇರಿ ಸಿಬ್ಬಂದಿ ಸೇರಿ ಸಾರ್ವಜನಿಕರು ಉಪಸ್ಥಿತರಿದ್ದರು.






