ಹುಮನಾಬಾದ್ | ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ತ್ಯಾಜ್ಯ ಬಿದ್ದು ಐವರು ಕಾರ್ಮಿಕರಿಗೆ ಗಾಯ

ಹುಮನಾಬಾದ್ ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಬಜಾಜ್ ಕಾರ್ಖಾನೆಯಲ್ಲಿ ರಾಸಾಯನಿಕ ತ್ಯಾಜ್ಯ ಸೋರಿಕೆಯಾಗಿ ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಉದ್ಭವಿಸಿವೆ.
ರವಿವಾರ ಸಂಜೆ ಕೆಲಸದ ವೇಳೆ ರಾಸಾಯನಿಕ ತ್ಯಾಜ್ಯ ಕಾರ್ಮಿಕರ ದೇಹದ ಮೇಲೆ ಬಿದ್ದ ಪರಿಣಾಮ ಐವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹುಮನಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಗಾಯಗೊಂಡವರಲ್ಲಿ ಮೂವರಿಗೆ ಭಾನುವಾರವೇ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಇಬ್ಬರನ್ನು 24 ಗಂಟೆಗಳ ಕಾಲ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಆ ಇಬ್ಬರನ್ನೂ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳಲ್ಲಿ ಪಶ್ಚಿಮ ಬಂಗಾಳ ಮೂಲದ ದೇಬು ಮುರಮು (24), ವಿಧಾನಾಷದಾ (19) ಸೇರಿದಂತೆ ಇತರ ಮೂವರು ಕಾರ್ಮಿಕರು ಸೇರಿದ್ದಾರೆ. ರಾಸಾಯನಿಕ ತ್ಯಾಜ್ಯ ತಗುಲಿದ ಪರಿಣಾಮ ಕೈ, ಮುಖ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಸುಟ್ಟ ಗಾಯಗಳಾಗಿವೆ.
ಈ ಘಟನೆ ಬಳಿಕ ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಎಂಬ ಪ್ರಶ್ನೆ ಗಂಭೀರವಾಗಿ ಕೇಳಿಬಂದಿದೆ. ಅಪಾಯಕಾರಿ ರಾಸಾಯನಿಕಗಳೊಂದಿಗೆ ಕೆಲಸ ಮಾಡುವ ಕಾರ್ಮಿಕರಿಗೆ ಸುರಕ್ಷತಾ ಸಾಧನಗಳು, ರಕ್ಷಣಾ ಕಿಟ್ಗಳು ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಸಮರ್ಪಕವಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ಘಟನೆ ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರೂ, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.






