ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಪರಿಹಾರ ಬಿಡುಗಡೆಗೆ ಸಿಎಂಗೆ ಮನವಿ: ಸಚಿವ ರಹೀಮ್ ಖಾನ್

ಬೀದರ್: ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು ತಕ್ಷಣಕ್ಕೆ 50 ಕೋಟಿ ರೂ. ಪರಿಹಾರದ ಅನುದಾನ ನೀಡಿದ್ದು, ಇನ್ನೂ 100 ಕೋಟಿ ರೂ. ಹೆೆಚ್ಚಿನ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಹೇಳಿದರು.
ಇಂದು ಬೀದರ್ ತಾಲ್ಲೂಕು ವ್ಯಾಪ್ತಿಯ ಭಾರಿ ಮಳೆಯಿಂದ ಅತಿವೃಷ್ಟಿ ಗ್ರಾಮಗಳಾದ ಸಂಗನಳ್ಳಿ, ಇಸ್ಲಾಂಪೂರ್, ಇಮಾಮ್ಬಾದ್ ಹಳ್ಳಿ, ಮಾಲೆಗಾಂವ್, ಕಪಲಾಪೂರ್, ಅಲಮಸ್ಪುರ್, ಜಾಂಪಾಡ್, ಅಲ್ಲಾಪೂರ್ ಹಾಗೂ ನೇಮತಾಬಾದ್ ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಅಲಿಯಂಬರ್ ಗ್ರಾಮದಲ್ಲಿ ಹಾನಿಗೊಳಗಾದ ಸೇತುವೆಯ ದುರಸ್ತಿಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾನಿಗೊಳಗಾದ ರಸ್ತೆ ಸೇತುವೆ ದುರಸ್ತಿ ಕಾರ್ಯ ಶೀಘ್ರವೇ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳೆಯಲಾದ ಹೆಸರು, ಉದ್ದು ಸೋಯಾಬೀನ್, ತೊಗರಿ ಸಂಪೂರ್ಣವಾಗಿ ನಾಶವಾಗಿವೆ. ವಿವಿಧ ಗ್ರಾಮಗಳಲ್ಲಿ ಸ್ಥಳಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಿ, ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಜಂಟಿ ಇಲಾಖಾ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸಿದ ಅವರು, ಬೆಳೆ ಹಾನಿ ಮತ್ತು ಮನೆ ಹಾನಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು ಎಂದರು.
ಕಳೆದ ಮೂರು ದಿನಗಳಿಂದ ಸತತವಾಗಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೆ.6 ರಿಂದ ಮತ್ತೆ ಮಳೆ ಪ್ರವಾಹ ಪರಿಶೀಲನಾ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬೀದರ್ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ತಹಸಿಲ್ದಾರ್ ರವೀಂದ್ರ ಧಾಮಾ ಹಾಗೂ ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.







