ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ರಹೀಮ್ ಖಾನ್ ಭೇಟಿ, ಪರಿಶೀಲನೆ

ಬೀದರ್ : ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಬೀದರ್ ತಾಲ್ಲೂಕಿನ ಜಾಂಪಾಡ್, ಚಿಲ್ಲರ್ಗಿ, ಇಸ್ಲಾಂಪುರ್ ಹಾಗೂ ಯರನಳ್ಳಿ ಸೇರಿದಂತೆ ಇನ್ನಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮಾತನಾಡಿದರು.
ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳೆಯಲಾದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕೆಲವು ಮನೆಗಳು, ರಸ್ತೆ, ಸೇತುವೆ ಕುಸಿದು, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಧಿಕಾರಿಗಳಿಗೆ ತುರ್ತು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಹೆಚ್ಚುವರಿ 8,500 ರೂ. ಪ್ರತಿ ಹೆಕ್ಟೇರ್ ಗೆ ಪರಿಹಾರ ಸೇರಿದಂತೆ ಖುಷ್ಕಿ ಜಮೀನಿಗೆ 17,000 ರೂ., ನೀರಾವರಿ ಜಮೀನಿಗೆ 25,000 ರೂ. ಹಾಗೂ ಬಹುವಾರ್ಷಿಕ ಬೆಳೆಗಳಿಗೆ 31,000 ರೂ. ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರು ನದಿ, ಕೆರೆಗಳಿಂದ ದೂರ ಇರಬೇಕು. ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಬೀದರ್ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಹಾಗೂ ತಾಲೂಕು ಪಂಚಾಯತ್ ಇಓ ಮಾಣಿಕರಾವ್ ಪಾಟೀಲ್ ಸೇರಿದಂತೆ ತೋಟಗಾರಿಕೆ, ಕಂದಾಯ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







