ಬೀದರ್: ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆ ವಿರೋಧಿಸಿ ದಲಿತರಿಗೆ ಬಹಿಷ್ಕಾರ; ಆರೋಪ
ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ ತೆರವುಗೊಳಿಸಿದ ಪೊಲೀಸರು

ಬೀದರ್: ಹುಲಸೂರ್ ತಾಲ್ಲೂಕಿನ ಗಡಿ ರಾಯಪಳ್ಳಿ ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಿದ ಅಂಬೇಡ್ಕರ್ ಹಾಗೂ ಬಸವಣ್ಣನವರ ಭಾವಚಿತ್ರಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಗಡಿ ರಾಯಪಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಹಿನ್ನಲೆ ಗ್ರಾಮದಲ್ಲಿನ ಸರ್ಕಾರಿ ಭೂಮಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹಾಕಲಾಗಿತ್ತು. ಎರಡು ದಿನಗಳ ಬಳಿಕ ಅದೇ ಊರಿನ ಇನ್ನೊಂದು ಸರ್ಕಾರಿ ಜಾಗದಲ್ಲಿ ಲಿಂಗಾಯತ ಸಮುದಾಯದವರು ಬಸವಣ್ಣನವರ ಭಾವಚಿತ್ರ ಅಳವಡಿಸಿದ್ದರು ಎನ್ನಲಾಗಿದೆ. ಇಂದು ದಿಢೀರ್ ಆಗಿ ಊರಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ದಲಿತರಿಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಆ ಊರಿನ ದಲಿತರು ಆರೋಪಿಸಿದ್ದಾರೆ.
ಸುದ್ದಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಜೆ.ಎಸ್ ನ್ಯಾಮೇಗೌಡ, ತಹಶೀಲ್ದಾರ್ ಶಿವಾನಂದ್ ಮೇತ್ರೆ ಹಾಗೂ ಪಿಡಿಒ ಸೇರಿದಂತೆ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಎರಡು ಸಮುದಾಯದಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಎರಡು ಸಮುದಾಯದಲ್ಲಿ ಒಮ್ಮತ ಮೂಡಿದ್ದು, ಅಂಗಡಿ ಮುಂಗಟ್ಟುಗಳು ಮತ್ತೆ ತೆರಯಲಾಗಿದೆ ಎಂದು ತಿಳಿದು ಬಂದಿದೆ.
ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಕಾರಿ ಜಾಗದಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.