ಮಳೆ ಹಾನಿ : ಅ.30ರ ಒಳಗಾಗಿ 3,00 ಕೋಟಿ ರೂ. ಪರಿಹಾರ ಪಾವತಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಜಿಲ್ಲಾದ್ಯಂತ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿ ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ. ಪರಿಹಾರ ಸೇರಿದಂತೆ ಅ.30ರ ಒಳಗಾಗಿ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ಪಾವತಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಳೆ ಸಂಜೆಯೊಳಗೆ ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ತುರ್ತು ಕ್ರಮ ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ನಿಯಮದಂತೆ 170 ಕೋಟಿ ರೂ. ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಅಕ್ಟೋಬರ್ 30ರೊಳಗೆ 300 ಕೋಟಿ ರೂ. ಪರಿಹಾರ ಮೊತ್ತ ಪಾವತಿಸಲಾಗುವುದು ಎಂದರು.
ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ, ಬೆಳೆಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡುವುದಾಗಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಹಗಲಿರುಳು ಶ್ರಮಿಸಿ, ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರ ನೆರವಿಗೆ ಧಾವಿಸಬೇಕು ಎಂದು ಸೂಚಿಸಿದರು.
ಬಸವಕಲ್ಯಾಣದಲ್ಲಿ 47, ಭಾಲ್ಕಿ 38, ಬೀದರ್ ತಾಲೂಕಿನಲ್ಲಿ ಮನೆ ಹಾನಿಗೊಳಗಾದವರಿಗೆ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗಿರುವ ಕುರಿತಂತೆ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಅವರು, ಇಂದು ಅಥವಾ ನಾಳೆ ಸಂಜೆಯೊಳಗೆ ಮನೆ ಹಾನಿಯ ಪರಿಹಾರ ಸಂತ್ರಸ್ತರಿಗೆ ದೊರಕುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿ, ವಿಳಂಬ, ಕರ್ತವ್ಯಲೋಪ, ನಿರ್ಲಕ್ಷ್ಯ ತೋರಿರುವ ಅಧಿಕಾರಿ, ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.
ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸುವ ಪ್ರತಿಯೊಂದು ಮಾಹಿತಿಯನ್ನೂ ಗ್ರಾಮಪಂಚಾಯತ್, ತಹಶೀಲ್ದಾರ್ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಬಹಿರಂಗವಾಗಿ ಪ್ರಕಟಿಸಿ, ಡಂಗೂರ ಹೊಡೆಸಿ, ಆಕ್ಷೇಪಣೆ ಆಹ್ವಾನಿಸಬೇಕು. ಯಾವುದೇ ಸಂತ್ರಸ್ತರ ಮಾಹಿತಿ ಕಣ್ತಪ್ಪಿನಿಂದ ಬಿಟ್ಟುಹೋಗಿದ್ದರೆ ಆಗ ಅವರ ಹೆಸರು ಸೇರ್ಪಡೆ ಮಾಡಲು ಇದು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಬೆಳೆ ವಿಮೆಯಡಿ ಬೆಳೆ ಋತುವಿನ ಮಧ್ಯದಲ್ಲಿ ವಿಕೋಪ ಉಂಟಾದರೆ ಪರಿಹಾರದ ಅವಕಾಶ ಕಲ್ಪಿಸಿದರೆ (ಮಿಡ್ ಸೀಸನ್ ಅಡ್ವರ್ಸಿಟಿ ಇನ್ವೋಕ್) ರೈತರಿಗೆ ಸೂಕ್ತ ಪರಿಹಾರ ಸಿಗುತ್ತದೆ. ಇನ್ವೋಕ್ ಆಗದಿದ್ದರೆ ರೈತರಿಗೆ ಅನ್ಯಾಯ ಆಗುತ್ತಿದೆ. ಕೂಡಲೇ ಈ ಬಗ್ಗೆ ಕ್ರಮವಹಿಸಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿನೆ ನೀಡಿದರು.
ಕಡಿದು ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪ್ರಸ್ತಾಪಿಸಿದಾಗ, ಆಘಾತ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ವಿದ್ಯುತ್ ತಂತಿಗಳು ಜಾಯಿಂಟ್ ಹಾಕಿರುವ ಕಡೆ ಕತ್ತರಿಸಿ ಬೀಳದಂತೆ ಕವರ್ ಕಂಡಕ್ಟರ್ಗಳನ್ನು ಅಳವಡಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಜೀವ ಹಾನಿ, ಬೆಳೆ ಹಾನಿ, ಮನೆ ಹಾನಿ, ರಸ್ತೆಗಳಿಗೆ ಹಾನಿಯಾಗಿದೆ. ಅದಕ್ಕೆ ಕೈಗೊಂಡಿರುವ ಕ್ರಮಗಳೇನು ಎಂಬ ಸಂಪೂರ್ಣ ಮಾಹಿತಿ ತಕ್ಷಣವೇ ಆಯಾ ಕ್ಷೇತ್ರ ವ್ಯಾಪ್ತಿಯ ಶಾಸಕರಿಗೆ ಮಾಹಿತಿ ನೀಡುವಂತೆ ಎಲ್ಲಾ ತಹಶೀಲ್ದಾರರುಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್, ಮಹಾನಗರ ಪಾಲಿಕೆಯ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ರಮ್ಯಾ ರಂಗಸ್ವಾಮಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಹಾಗೂ ತಾಲ್ಲೂಕಿನ ಎಲ್ಲಾ ತಹಸೀಲ್ದಾರರು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







