ಆಡಳಿತದಲ್ಲಿ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ : ಶಾಸಕ ಡಾ.ಅಜಯ್ ಧರ್ಮಸಿಂಗ್

ಬೀದರ್ : ಆಡಳಿತ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ 12 ವರ್ಷಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಎಲ್ಲಿ ಹೋಗಿ ತಲುಪಿದೆ ಎಂಬುದನ್ನು ಜನರು ಗಮನಿಸಬಹುದು ಎಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರಕ್ಕೆ ಶುಕ್ರವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಅಧಿಕಾರದಲ್ಲಿದ್ದಾಗ ಪೆಟ್ರೋಲ್ ದರ ಪ್ರತಿ ಲೀಟರ್ಗೆ 70 ರೂ. ಇತ್ತು. ಇಂದು ಅದು 110 ರೂ. ಗೆ ತಲುಪಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ 400 ರೂ. ಇದ್ದ ಗ್ಯಾಸ್ ಸಿಲಿಂಡರ್ಗೆ 200 ರೂ. ಸಬ್ಸಿಡಿ ಸಿಗುತ್ತಿತ್ತು. ಈಗ ಗ್ಯಾಸ್ ಬೆಲೆ 1,000 ರೂ. ದಾಟಿದರೂ ಸಬ್ಸಿಡಿ ಇಲ್ಲ” ಎಂದು ಟೀಕಿಸಿದರು.
“ದೇಶ ಸಂಕಷ್ಟದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿಕೆ ನೀಡಿದ್ದಾರೆ. ಕಳೆದ 12 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಜಾತಿ-ಧರ್ಮದ ರಾಜಕಾರಣ ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಮಾಡಿಲ್ಲ” ಎಂದು ಆರೋಪಿಸಿದರು.
2014ರಲ್ಲಿ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಪ್ರಧಾನಿ ಮೋದಿ, ಆ ಮಾತನ್ನು ಈಡೇರಿಸಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, “ಕಳೆದ 40 ವರ್ಷಗಳಲ್ಲಿ ಅತಿ ಕಡಿಮೆ ಉದ್ಯೋಗ ಸೃಷ್ಟಿಯಾಗಿರುವುದು ಇದೇ ಸರ್ಕಾರದ ಅವಧಿಯಲ್ಲಿ. ಬಿಜೆಪಿ ನಾಯಕರು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ, ಆದರೆ ಕಾರ್ಯರೂಪಕ್ಕೆ ಏನೂ ತರುವುದಿಲ್ಲ” ಎಂದು ಕಿಡಿಕಾರಿದರು.
ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “2018 ಹಾಗೂ 2023ರಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟಿದೆ. ನನಗೂ ಒಳ್ಳೆಯ ಖಾತೆ ಸಿಗುವ ವಿಶ್ವಾಸವಿದೆ” ಎಂದರು.
“ಕೆಕೆಆರ್ಡಿಬಿ ಅಧ್ಯಕ್ಷನಾಗಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸೇವೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿನ ಅಧಿಕಾರ ಹಂಚಿಕೆ ಕುರಿತು ಮಾತನಾಡಿದ ಅವರು, “ಕೇರಳ ಚುನಾವಣೆ ಮುಗಿಯುವವರೆಗೂ ಯಾವುದೇ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿತ್ತು. ಮೇ 18ರಂದು ಕೇರಳ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ರಾಜ್ಯದಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಅದರ ಬಳಿಕ ಪಕ್ಷದ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ” ಎಂದು ಹೇಳಿದರು.
“ಆ ಬಳಿಕ ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬಹುದು” ಎಂದು ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.






