ಬಲಿಷ್ಠ ಭಾರತ ನಿರ್ಮಾಣಕ್ಕೆ ಜಾಗೃತ ಯುವಶಕ್ತಿಯ ಅಗತ್ಯವಿದೆ : ಓಂಪ್ರಕಾಶ್ ರೊಟ್ಟೆ

ಬೀದರ್ : ಬಲಿಷ್ಠ ಭಾರತ ನಿರ್ಮಾಣಕ್ಕೆ ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ಜಾಗೃತ ಯುವಶಕ್ತಿಯ ಅಗತ್ಯವಿದೆ ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಓಂಪ್ರಕಾಶ್ ರೊಟ್ಟೆ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರ್ಕಾರದ ಮೇರಾ ಯುವ ಭಾರತ್ ಯೋಜನೆಯಡಿ ಬುಧವಾರ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ದಿನನಿತ್ಯದ ಜೀವನದಲ್ಲಿ ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ಸಂದರ್ಭದಲ್ಲಿ ಬೈಸಿಕಲ್ ಬಳಸುವುದರಿಂದ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬಹುದು ಎಂದರು.
ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಯುವಕರು ಸಾಮಾಜಿಕ ಮತ್ತು ರಾಷ್ಟ್ರೀಯ ವಿಚಾರಗಳಲ್ಲಿ ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು.
ಡಾ. ಪ್ರಭುಲಿಂಗ್ ಬಿರಾದರ್ ಅವರು ಮಾತನಾಡಿ, ಆರೋಗ್ಯವಂತ ಯುವ ಸಮುದಾಯವೇ ಬಲಿಷ್ಠ ರಾಷ್ಟ್ರ ನಿರ್ಮಾಣದ ಆಧಾರವಾಗಿದ್ದು, ಪ್ರತಿಯೊಬ್ಬ ಯುವಕನು ತನ್ನ ಆರೋಗ್ಯದ ಕಡೆ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.
ಪ್ರಾಂಶುಪಾಲ ದೇವೇಂದ್ರ ಹಂಚೆ ಅವರು ಮಾತನಾಡಿ, ಯುವಕರಲ್ಲಿ ಜಾಗೃತಿ ಮೂಡಿಸುವ ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಗೆ ಕಾಲೇಜಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ಮುಖ್ಯಸ್ಥ ಹಾಗೂ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ನಿಖಿಲ್ ಕುಮಾರ್ ಅವರು ತಮ್ಮ ಇಲಾಖೆಯಿಂದ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸತೀಶ್ ಬೆಳೆಟೆ, ಫಯಾಝ್ ಶೇಖ್, ಎಚ್ಒಡಿ ವಿಜಯಕುಮಾರ್, ಶಿವಲಿಂಗ್ ಮಠ್, ಮಂಜುನಾಥ್ ಹಾಗೂ ಸೋಮನಾಥ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






