ಮೇಕೆದಾಟು ಯೋಜನೆ : ತಮಿಳುನಾಡು ಸಿಎಂ ವಿರುದ್ದ ಚಾಮರಾಜನಗರದಲ್ಲಿ ಪ್ರತಿಭಟನೆ

ಚಾಮರಾಜನಗರ : ರಾಜ್ಯದ ಮೇಕೆದಾಟಿನಲ್ಲಿ ಕುಡಿಯುವ ನೀರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಕ್ರಿಯಾಯೋಜನೆ ಸಿದ್ದಪಡಿಸಿದ್ದು, ಅದನ್ನು ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರೋಧಿಸಿದ್ದಾರೆಂದು ಆರೋಪಿಸಿ ಅವರ ವಿರುದ್ದ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದವು.
ಚಾಮರಾಜನಗರದ ಶ್ರೀ ಭುವನೇಶ್ವರಿ ವತ್ತದಲ್ಲಿ ಜಮಾಯಿಸಿದ ಕನ್ನಡ ಪರ ಸಂಘಟನೆಯ ಮುಖಂಡರು ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ದ ಘೋಷಣೆ ಕೂಗಿದರು.
ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕ ಸರ್ಕಾರವು ಅಂತರಾಜ್ಯ ಗಡಿ ಭಾಗದಲ್ಲಿ ಅಭಿವೃದ್ದಿ ಯೋಜನೆ ಕೈಗೊಂಡಾಗೆಲ್ಲ, ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ದಿ. ಕರುಣಾನಿಧಿ, ದಿ. ಜೆ. ಜಯಲಲಿತಾರವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ಬಗ್ಗೆ ಅಂದಿನಿಂದಲೂ ನಿರಂತರವಾಗಿ ಕರ್ನಾಟಕದಲ್ಲಿ ಹೋರಾಟ ನಡೆಸಲಾಗುತ್ತಿತ್ತು. ಪ್ರಸ್ತುತ ಮೇಕೆದಾಟು ಯೋಜನೆಗೆ ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ರವರು ವಿರೋಧ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್ ಗೂ ಹೋಗಿದ್ದರು. ಆದರೆ ಸುಪ್ರಿಂ ಕೋರ್ಟ್ ನಲ್ಲಿ ರಾಜ್ಯದ ಪರವಾಗಿ ತೀರ್ಪುಬಂದಿದೆ ಎಂದರು.
ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರವು ರೂಪಿಸಿರುವ ಯೋಜನೆಯಿಂದ ಲಕ್ಷಾಂತರ ಹೆಕ್ಟೇರ್ ಕೃಷಿಭೂಮಿಗೆ ನೀರು ಹಾಗೂ ಏಳೆಂಟು ಜಿಲ್ಲೆಗಳಿಗೆ ನದಿ ಮೂಲದಿಂದ ಕುಡಿಯುವ ನೀರು ಹರಿಯಲಿದೆ, ಇದನ್ನು ಅರಿಯದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಮೇಕೆದಾಟು ಯೋಜನೆಗೆ ವಿರೋಧ ಮುಂದುವರೆಸಿದರೆ ಹೋರಾಟ ತೀವ್ರ ಸ್ವರೂಪವಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ಹಿರಿಯ ಕನ್ನಡ ಚಳವಳಿಗಾರ ಶಾ.ಮುರಳಿ, ಚಾ.ವೆಂ.ರಾಜಗೋಪಾಲ್, ರವಿಚಂದ್ರಪ್ರಸಾದ್ , ಮಹೇಶ್ ಗೌಡ, ಮುತ್ತುರಾಜ್, ಸಿದ್ದಶೆಟ್ಟಿ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






