ಜಂಗಮಕೋಟೆ ಭೂಸ್ವಾಧೀನ ವಿರುದ್ಧದ ಧರಣಿ 136ನೇ ದಿನಕ್ಕೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2,390 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸರಕಾರ ಮುಂದಾಗಿರುವುದನ್ನು ಹಾಗೂ ಭೂಸ್ವಾಧೀನಕ್ಕೆ ಕೆಐಎಡಿಬಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ರೈತ ಸಂಘ,ಹಸಿರು ಸೇನೆ ಹಾಗೂ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಹೊರವಲಯದ ಜಿಲ್ಲಾಡಳಿತ ಭವನದ ಎದುರು ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ 136ನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಜಂಗಮಕೋಟೆಯಿಂದ ಬೃಹತ್ ಬೈಕ್ ರ್ಯಾಲಿ ನಡೆಸುವುದಾಗಿ ಘೋಷಿಸಿದರು.
ಈ ವೇಳೆ ಮಾತನಾಡಿದ ಅವರು, ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಬಾರದು ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಬಾರದು. ರೈತರು ತಮ್ಮ ಹಕ್ಕಿಗಾಗಿ ಸಂಘಟಿತವಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ಆನೇಕಲ್, ಬಿಡದಿ, ಜಂಗಮಕೋಟೆ ಹಾಗೂ ಇತರ ಭಾಗಗಳ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ ಅವರು, ಎಲ್ಲ ರೈತರೂ ಸಂಘಟಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಂಗಮಕೋಟೆ 13 ಹಳ್ಳಿಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಹೀರೆಬಲ್ಲ ಕೃಷ್ಣಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ಮರಳುಕುಂಟೆ ರಾಮಾಂಜಿನಪ್ಪ, ತಾದೂರು ಮಂಜುನಾಥ್, ಅಶ್ವತ್ಥ ನಾರಾಯಣ ಗೌಡ, ಅಜಿತ್ ಕುಮಾರ್, ಡಿಎಸ್ಎಸ್ ಸಂಚಾಲಕ ಎನ್.ವೆಂಕಟೇಶ್, ಹೊಂಬೆ ಗೌಡ, ಕೃಷ್ಣ ಮೂರ್ತಿ, ರಾಘವೇಂದ್ರ, ಮೋಹನ್, ಗೌರಮ್ಮ, ಭಾಗ್ಯಮ್ಮ, ಪದ್ಮಮ್ಮ, ಕೆಆರ್ಎಸ್ನ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಆನಂದ್, ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ್, ಶಿವಾರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಇತರರು ಉಪಸ್ಥಿತರಿದ್ದರು.
ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕು ಎಂಬ ಆಗ್ರಹದೊಂದಿಗೆ ಕಳೆದ 136 ದಿನಗಳಿಂದ ವಿವಿಧ ರೀತಿಯ ಹೋರಾಟಗಳನ್ನು ನಡೆಸಲಾಗುತ್ತಿದೆ.ನಮ್ಮ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಹಗಲು-ರಾತ್ರಿ ಎನ್ನದೆ ನಿರಂತರ ಧರಣಿ ನಡೆಸಲಾಗುತ್ತಿದೆ. ಆದರೂ ಸರಕಾರ ಮೌನ ವಹಿಸಿದೆ. ಹೋರಾಟಕ್ಕೆ ಅಡ್ಡಿಪಡಿಸುವ ಪ್ರಯತ್ನಗಳೂ ನಡೆದಿವೆ. ಆದರೆ ಯಾವುದೇ ಒತ್ತಡಕ್ಕೂ ಜಗ್ಗುವುದಿಲ್ಲ . ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು.
-ಹೀರೆಬಲ್ಲ ಕೃಷ್ಣಪ್ಪ, ಅಧ್ಯಕ್ಷ, ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ






