ಬಾಬಾ ಬುಡಾನ್ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ

ಚಿಕ್ಕಮಗಳೂರು : ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.
ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿಯ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮತ್ತು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರ ಕಚೇರಿ ಈ ಆದೇಶವನ್ನು ಹೊರಡಿಸಿದೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯನ್ನು ಏಕಪಕ್ಷೀಯವಾಗಿ ರಚನೆ ಮಾಡಲಾಗಿದೆ ಎಂಬ ಟೀಕೆಗಳು ಆಗ ವ್ಯಕ್ತವಾಗಿದ್ದು, ಸಮಿತಿ ಬದಲಾವಣೆಗೂ ಕೆಲ ಸಂಘಟನೆಗಳು ಒತ್ತಾಯಿಸಿದ್ದವು. ಸದ್ಯ ವ್ಯವಸ್ಥಾಪನಾ ಸಮಿತಿಯ ಅಧಿಕಾರವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾಕ್ಕೆ ನೂತನ ಆಡಳಿತಾಧಿಕಾರಿಯನ್ನು ನೇಮಿಸಿ ಸರಕಾರ ಆದೇಶಿಸಿದೆ.
ಸ್ವಾಗತಾರ್ಹ :
ಶ್ರೀ ಗುರು ದತ್ತಾತ್ರೇಯ ಬಾಬಾಬುಡಾನ್ ಸ್ವಾಮಿ ದರ್ಗಾಕ್ಕೆ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿಯನ್ನು ಸರಕಾರ ನೇಮಿಸಿರುವ ನಿರ್ಧಾರವನ್ನು ಸ್ವಾಗತಿಸುವುದಾಗಿ ಸೈಯದ್ ಬಾಬಾ ಬುಡಾನ್ ಶಾ ಖಾದ್ರಿ ವಂಶಸ್ಥ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿಂದಿನ ವ್ಯವಸ್ಥಾಪನಾ ಸಮಿತಿಯ ಅವಧಿ ಮುಗಿದಿದ್ದರೂ ಅನೇಕ ಅಕ್ರಮಗಳು ಮತ್ತು ಆಕ್ಷೇಪಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ದರ್ಗಾದ ಪಾವಿತ್ರ್ಯಮತ್ತು ಕಾನೂನುಬದ್ಧ ಆಡಳಿತ ಕಾಪಾಡಲು ಇದು ಅತ್ಯಂತ ಸೂಕ್ತ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.







