ಚಿಕ್ಕಮಗಳೂರು | ವಿಎಚ್ಪಿ, ಬಜರಂಗದಳ ಕರೆ ನೀಡಿದ್ದ ಬಂದ್ಗೆ ಮಿಶ್ರ ಪ್ರತಿಕ್ರಿಯೆ

ಚಿಕ್ಕಮಗಳೂರು : ಪಹಲ್ಗಾಮ್ ದಾಳಿ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸೋಮವಾರ ಕರೆ ನೀಡಿದ್ದ ಬಂದ್ಗೆ ಕಾಫಿನಾಡಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಚಿಕ್ಕಮಗಳೂರು ನಗರ ಸೇರಿದಂತೆ ಬಯಲು ಭಾಗದ ತಾಲೂಕುಗಳಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಪಹಲ್ಗಾಮ್ ದಾಳಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ವಿಎಚ್ಪಿ ಹಾಗೂ ಬಜರಂಗದಳ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಬಂದ್, ಪ್ರತಿಭಟನೆಗೆ ಕರೆ ನೀಡಿದ್ದವು. ಆದರೆ ಬಂದ್ ಹಾಗೂ ಪ್ರತಿಭಟನೆ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ರವಿವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂದ್ಗೆ ಯಾವುದೇ ಸಂಘಟನೆಗಳು ಅನುಮತಿ ಕೋರಿಲ್ಲ. ಈ ಹಿನ್ನೆಲೆಯಲ್ಲಿ ಬಂದ್ ನಡೆಸಲು ಅನುಮತಿ ಇಲ್ಲ. ಅನುಮತಿ ಇಲ್ಲದೇ ಬಂದ್ ಪ್ರತಿಭಟನೆ ನಡೆಸಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದರು.
ಜಿಲ್ಲಾಡಳಿತದ ಸುದ್ದಿಗೋಷ್ಠಿ ಬೆನ್ನಲ್ಲೇ ರವಿವಾರ ಸಂಜೆ ಸಂಘ ಪರಿವಾರಗಳ ಮುಖಂಡರು, ಬಂದ್ಗೆ ಅನುಮತಿ ಕೋರಿದ್ದರಿಂದ ಸೋಮವಾರ 12ರವರೆಗೆ ಮಾತ್ರ ಶಾಂತಿಯುತ ಬಂದ್ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿತ್ತಾದರೂ ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳ ವ್ಯಾಪ್ತಿಯ ಕಳಸ, ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದ ವ್ಯಾಪಾರಿಗಳು ಬಂದ್ಗೆ ಸಹಕಾರ ನೀಡಿದ್ದರು. ಈ ತಾಲೂಕುಗಳ ವ್ಯಾಪ್ತಿಯಲ್ಲಿ ಬಂದ್ ಕರೆ ನೀಡಿದ್ದರೂ ಜನ, ವಾಹನ ಸಂಚಾರ ಎಂದಿನಂತಿತ್ತು. ಸಂಘ ಪರಿವಾರಗಳ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನಾ ಸಭೆ ನಡೆಸಿ, ಪಹಲ್ಗಾಮ್ ದಾಳಿಕೋರರು ಹಾಗೂ ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು.
ಆದರೆ ಚಿಕ್ಕಮಗಳೂರು ನಗರ ಹಾಗೂ ಬಯಲು ಭಾಗದಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನಗರದಲ್ಲಿ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದರೆ, ಮತ್ತೆ ಕೆಲ ಅಂಗಡಿ ಮುಂಗಟ್ಟುಗಳು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದರು. ನಗರದ ಎಂಜಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆಯಲ್ಲಿ ಕೆಲ ಅಂಗಡಿಗಳು ಮುಚ್ಚಿದ್ದರೆ, ಕೆಲ ಅಂಗಡಿ, ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದಲ್ಲಿ ಆಟೊ ಸೇವೆ ಎಂದಿನಂತೆ ಇತ್ತು. ಸರಕಾರಿ, ಖಾಸಗಿ ಸಾರಿಗೆ ಬಸ್ಗಳ ಓಡಾಟವೂ ಎಂದಿನಂತಿತ್ತು. ಹೊಟೇಲ್ಗಳೂ ಅಲಲ್ಲಿ ತೆರೆದಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದ ವಿಎಚ್ಪಿ, ಬಜರಂಗದಳ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಇನ್ನು ಜಿಲ್ಲೆಯ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ತಾಲೂಕುಗಳ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಸಾಮಾನ್ಯವಾಗಿತ್ತು. ಜನ, ವಾಹನ ಸಂಚಾರವೂ ಎಂದಿನಂತಿತ್ತು. ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಲು ಮುಂದಾಗಿದ್ದವರು ಹಾಗೂ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಬಂದ್ ಕರೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸುವ ಮೂಲಕ ಪೊಲೀಸ್ ಇಲಾಖೆ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯ ಕ್ರಮಕೊಂಡಿತ್ತು. ಒಟ್ಟಾರೆ ವಿಎಚ್ಪಿ, ಬಜರಂಗದಳ ಸೋಮವಾರ ಕರೆ ನೀಡಿದ್ದ ಬಂದ್ಗೆ ಜಿಲ್ಲಾದ್ಯಂತ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.