ಸಂಘ ಪರಿವಾರ ಕರೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಬಂದ್ಗೆ ಅನುಮತಿ ನೀಡಿಲ್ಲ : ಡಿಸಿ ಮೀನಾ ನಾಗರಾಜ್

ಚಿಕ್ಕಮಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಹಾಗೂ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಮೇ 5ರಂದು ಕರೆ ನೀಡಿದ್ದ ಜಿಲ್ಲಾ ಬಂದ್ಗೆ ಯಾವುದೇ ಅನುಮತಿ ನೀಡಿಲ್ಲ. ಈ ವಿಚಾರದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ರವಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಪರಿವಾರದವರು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಗೆ ಮುಂಚಿತವಾಗಿ ಮಾಹಿತಿ ನೀಡದೆ, ಅನುಮತಿಯನ್ನೂ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ್ಗೆ ಕರೆ ನೀಡಿರುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಬಂದ್ ಕರೆಗೆ ಅವಕಾಶ ನಿರಾಕರಿಸಲಾಗಿದೆ ಎಂದು ತಿಳಿಸಿದರು.
ಬಂದ್-ಪ್ರತಿಭಟನೆ ಸಂಬಂಧ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ಅನುಮತಿ ಪಡೆಯಬೇಕಾಗುತ್ತದೆ. ಆದರೆ ಸಂಘಪರಿವಾರದವರು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಸೋಮವಾರ ಬಂದ್ಗೆ ಕರೆ ನೀಡಿವೆ. ಕಾನೂನು ಪ್ರಕಾರ ಇದಕ್ಕೆ ಅವಕಾಶ ಇರುವುದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶಗಳಿರುವ ಬಗ್ಗೆ ಸಂಘಟಕರಿಗೆ ಮನವರಿಕೆ ಮಾಡಿದ್ದೇವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ಮಾತನಾಡಿ, ರವಿವಾರ ಬೆಳಗ್ಗೆಯಿಂದ ವಿಶ್ವಹಿಂದೂ ಪರಿಷತ್, ಬಜರಂಗದಳದ ಸಾಮಾಜಿಕ ಜಾಲತಾಣ ಗ್ರೂಪ್ಗಳಲ್ಲಿ ಸೋಮವಾರ ಜಿಲ್ಲಾ ಬಂದ್ ಕರೆ ಕೊಟ್ಟಿರುವುದಾಗಿ ಪೋಸ್ಟ್ ಹಾಕಲಾಗಿದೆ. ಆದರೆ, ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡೂ ಸಂಘಟನೆಗಳ ಮುಖಂಡರ ಸಭೆ ನಡೆಸಿ ದಿಢೀರ್ ಬಂದ್ ಕರೆಗೆ ಅವಕಾಶ ಇಲ್ಲ ಎನ್ನುವುದನ್ನು ಮನವರಿಕೆ ಮಾಡಿದ್ದೇವೆ. ನ್ಯಾಯಾಲಯದ ಆದೇಶಗಳ ಕುರಿತು ಮಾಹಿತಿ ನೀಡಿದ್ದೇವೆ ಎಂದರು.
ಪ್ರತಿಭಟನೆ, ಬಂದ್ಗೆ ಸಂಬಂಧಿಸಿದಂತೆ ಯಾವುದೇ ಸಂಘಟನೆಗಳ ಪರವಾಗಿ ಜವಾಬ್ದಾರಿ ತೆಗೆದುಕೊಳ್ಳುವವರು ಮುಂಚಿತವಾಗಿ ಬರವಣಿಗೆಯಲ್ಲಿ ಅನುಮತಿ ಕೇಳಿದರೆ ಕಾನೂನು ಪ್ರಕಾರ ಅವಕಾಶ ನೀಡಲಾಗುವುದು. ಆದರೆ ಇದುವರೆಗೂ ಯಾರೂ ಅನುಮತಿ ಕೋರಿಲ್ಲ, ಅನುಮತಿ ಇಲ್ಲದೇ ಬಂದ್ಗೆ ಕರೆ ನೀಡುವಂತಿಲ್ಲ. ಇದನ್ನು ಮೀರಿ ಸೋಮವಾರ ಯಾರಾದರೂ ಬಂದ್, ಪ್ರತಿಭಟನೆಗೆ ಮುಂದಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಕೋರ್ಟ್ನ ಆದೇಶ ಪ್ರತಿಗಳನ್ನು ಲಗತ್ತಿಸಿ ಸಂಘಟನೆ ಮುಖಂಡರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
"ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಪಿಯುಸಿ ಪೂರಕ ಪರೀಕ್ಷೆಗಳು ಹಾಗೂ 8 ಕಡೆಗಳಲ್ಲಿ ವಾರದ ಸಂತೆ ನಡೆಯಲಿದೆ. ದಿಢೀರ್ ಬಂದ್ಗೆ ಕರೆ ಕೊಟ್ಟರೆ ದೈನಂದಿನ ಚಟುವಟಿಕೆಗೆ ಸಮಸ್ಯೆ ಆಗುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಬಂದ್ ಕರೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ"
ಮೀನಾ ನಾಗರಾಜ್, ಜಿಲ್ಲಾಧಿಕಾರಿ
ಸೋಮವಾರ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ. ಈ ವಿಚಾರದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಸಂಘಟನೆಗಳು ಈ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿವೆ.
ಡಾ.ವಿಕ್ರಮ ಅಮಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ