ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಮುಕ್ತಾಯ; ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು

ಚಿಕ್ಕಮಗಳೂರು : ಅತ್ಯಂತ ಕುತೂಹಲ ಕೇರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಟಿ.ಡಿ.ರಾಜೇಗೌಡ ಪ್ರತಿಸ್ಫರ್ಧಿ ಡಿ.ಎನ್.ಜೀವರಾಜ್ ವಿರುದ್ಧ ಜಯಗಳಿಸುವ ಮೂಲಕ ಶಾಸಕ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಅಂಚೆ ಮತಗಳ ಮರು ಎಣಿಕೆ ಹಿನ್ನಲೆ:
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು.
ಮೊಕದ್ದಮೆಯನ್ನು ಕೈಗೆತ್ತಿಕೊಂಡು ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅದರಂತೆ ಶನಿವಾರ ನಗರದ ಐಡಿಎಸ್ಜಿ ಕಾಲೇಜಿನಲ್ಲಿ 2023ರ ವಿಧಾನಸಭೆ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಕೈಗೊಂಡಿತ್ತು. ಶನಿವಾರ ಬೆಳಿಗ್ಗೆಯಿಂದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಸಿದ್ದು, ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ಇಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಟಿ.ಡಿ.ರಾಜೇಗೌಡ ಈ ಹಿಂದಿಗಿಂತಲೂ ಹೆಚ್ಚುವರಿಯಾಗಿ ಎರಡು ಮತಗಳನ್ನು ಪಡೆದುಕೊಳ್ಳುವ ಮೂಲಕ ಅಂತರವನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ:
ಮರು ಮತ ಎಣಿಕೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸತ್ಯಕ್ಕೆ ಜಯ ಸಿಕ್ಕಿದೆ. ಜನಾದೇಶ ಬದಲಿಸಲು ಸಾಧ್ಯವಿಲ್ಲ ಎಂಬ ಘೋಷಣೆಗಳನ್ನು ಕೂಗಿದರು.
2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಒಟ್ಟು 1822 ಅಂಚೆ ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ 279 ಮತಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಈ ತಿರಸ್ಕೃತ ಮತಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಮರು ಎಣಿಕೆಗೆ ಒತ್ತಾಯಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು.






