ಹೈಕೋರ್ಟ್ ಸಂಚಾರಿ ಪೀಠ| ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾ. ಅಬ್ದುಲ್ ನಝೀರ್ - ಎಂಎಲ್ಸಿ ಐವನ್ ಡಿಸೋಜಾ ಭೇಟಿ

ಮಂಗಳೂರು, ಮೇ 23: ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ಆಗಿರುವ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರು ಶನಿವಾರ ಮಂಗಳೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ರಾಜ್ಯಪಾಲರಾದ ಎಸ್. ಅಬ್ದುಲ್ ನಝೀರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತಾಗಿ ಇದುವರೆಗೆ ನಡೆದ ಬೆಳವಣಿಗೆಗಳು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ನಡೆದ ಚರ್ಚೆಗಳು, ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲಾದ ಕ್ರಮಗಳು ಹಾಗೂ ಮುಂದಿನ ಹಂತದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದ್ದು, ಅಕ್ಟೋಬರ್ ತಿಂಗಳೊಳಗೆ ಸಂಚಾರಿ ಪೀಠ ಆರಂಭಿಸಲು ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ಹಾಗೂ ಹೈಕೋರ್ಟ್ ಆಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.
ಕರ್ನಾಟಕ ಸರ್ಕಾರವು ಸಂಚಾರಿ ಪೀಠ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ನೀಡಿರುವುದು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಮ್ಮತಿ ಸೂಚಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ನ್ಯಾಯಮೂರ್ತಿ ಗಳಿಗೆ ತಿಳಿಸಲಾಯಿತು. ಮುಂದಿನ ಹಂತದಲ್ಲಿ ಯಾವ ಜಿಲ್ಲೆಗಳು ಸಂಚಾರಿ ಪೀಠ ವ್ಯಾಪ್ತಿಗೆ ಒಳಪಡುವುದು ಹಾಗೂ ಅಗತ್ಯ ಆಡಳಿತಾತ್ಮಕ ಕ್ರಮಗಳ ಬಗ್ಗೆ ಹೈಕೋರ್ಟ್ ತೀರ್ಮಾನ ಕೈಗೊಳ್ಳಬೇಕಿದೆ ಎಂಬುದನ್ನೂ ಚರ್ಚಿಸಲಾಯಿತು.
ಇದೇ ವೇಳೆ ಹೈಕೋರ್ಟ್ನಲ್ಲಿ ನ್ಯಾಯಾಧೀಶರ ಸಂಖ್ಯೆಯ ಕೊರತೆ ಇರುವ ವಿಚಾರವನ್ನೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಅಗತ್ಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು.
ಸಂಚಾರಿ ಪೀಠ ಸ್ಥಾಪನೆಯಿಂದ ಕರಾವಳಿ ಭಾಗದ ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕ ವಲಯದಿಂದ ಈ ಹೋರಾಟಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವ ವಿಚಾರವನ್ನೂ ನ್ಯಾಯಮೂರ್ತಿಗಳ ಗಮನಕ್ಕೆ ತರಲಾಯಿತು.






