ಬೆಳ್ತಂಗಡಿ: ಕೌಟುಂಬಿಕ ಕಲಹ; ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ

ಬೆಳ್ತಂಗಡಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕೊಲೆಯಾದವರನ್ನು ಬಾಜಾರು ನಿವಾಸಿ ರಫೀಕ್ ಎಂಬವರ ಪತ್ನಿ ಝೀನತ್(38) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜು. 17 ರಂದು ಬೆಳಿಗ್ಗೆ ಕಲಹ ನಡೆದಾಗ ಆರೋಪಿ ರಫೀಕ್ ನು ತನ್ನ ಪತ್ನಿ ಝೀನತ್ ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.







