ಆಹಾರ ಸುರಕ್ಷತಾ ಕಾಯ್ದೆಯಡಿ ಪಿಜಿಗಳ ನೋಂದಣಿ ಕಡ್ಡಾಯ: ಡಿಎಚ್ಒ ಡಾ.ತಿಮ್ಮಯ್ಯ
![ಆಹಾರ ಸುರಕ್ಷತಾ ಕಾಯ್ದೆಯಡಿ ಪಿಜಿಗಳ ನೋಂದಣಿ ಕಡ್ಡಾಯ: ಡಿಎಚ್ಒ ಡಾ.ತಿಮ್ಮಯ್ಯ ಆಹಾರ ಸುರಕ್ಷತಾ ಕಾಯ್ದೆಯಡಿ ಪಿಜಿಗಳ ನೋಂದಣಿ ಕಡ್ಡಾಯ: ಡಿಎಚ್ಒ ಡಾ.ತಿಮ್ಮಯ್ಯ](https://www.varthabharati.in/h-upload/2024/02/12/1243185-471151314m-1706943162300.webp)
ಸಾಂದರ್ಭಿಕ ಚಿತ್ರ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಸೂಚನೆ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರಕಾರಿ ಮತ್ತು ಖಾಸಗಿ ವಸತಿ ನಿಲಯಗಳು, ಬಿಸಿಯೂಟ ನಡೆಸುವ ಶಾಲೆಗಳಿಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ಇವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಜಿಲ್ಲೆಯ ಕೆಲವು ಖಾಸಗಿ ನರ್ಸಿಂಗ್ ಕಾಲೇಜುಗಳ ವಸತಿ ನಿಲಯಗಳಲ್ಲಿ ಇತ್ತೀಚೆಗೆ ವಾಂತಿ-ಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಡಿಡಿಪಿಐ, ಸಂಬಂಧ ಪಟ್ಟ ಇಲಾಖೆಗಳ ಪ್ರಮುಖರು, ವಸತಿ ನಿಲಯಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಕರಣ ದಾಖಲಿಸಲು ಅವಕಾಶ : ನಿಯಮಗಳನ್ನು ಒಂದೊಮ್ಮೆ ಸಂಸ್ಥೆಗಳು ಪಾಲಿಸದಿದ್ದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿಂದೆ ನಗರದ ಕದ್ರಿ ರಸ್ತೆಯ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ರವಿವಾರ ಇನ್ನೊಂದು ಸಂಸ್ಥೆಯ ವಸತಿ ನಿಲಯದಲ್ಲಿ ಇಂತಹುದೇ ಪ್ರಕರಣ ನಡೆದಿರುವುದು ವರದಿಯಾಗಿದೆ. ಘಟನೆಯ ಸ್ಥಳದಲ್ಲಿದ್ದ ಆಹಾರದ ಸ್ಯಾಂಪಲ್ನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ . ವರದಿ ಬಂದ ಮೇಲೆ ಕ್ರಮ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ವಳಚ್ಚಿಲ್ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಅಲ್ಲಿನ ಅಡುಗೆ ಕೋಣೆಗೆ ಬಾಗಿಲು ಹಾಕಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಾಸ್ತಾನು ಕೊಠಡಿಯಲ್ಲಿ ದಿನಸಿ, ತರಕಾರಿಗಳು, ಆಹಾರ ಪದಾರ್ಥಗಳ ಸ್ವಚ್ಛತೆ ಕಾಪಾಡುವ ಜೊತೆಗೆ, ಇಲಿ, ಹೆಗ್ಗಣ, ಹಲ್ಲಿ ಕ್ರಿಮಿಕೀಟಗಳ ಹಾವಳಿ ಇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ವಸತಿ ನಿಲಯಗಳು ಪಾಲಿಸಬೇಕಾದ ನಿಯಮಗಳನ್ನು ಕಳುಹಿಸಲಾಗಿದ್ದು, ಇದು ಬಿಸಿಯೂಟ ಒದಗಿಸುವ ಶಾಲೆಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.
ಅಡುಗೆ ಕೋಣೆಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕುಡಿಯಲು ಮತ್ತು ಅಡುಗೆಗೆ ಬಳಸುವ ನೀರು ಶುದ್ಧವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಡುಗೆ ಮಾಡುವವರು, ಸಹಾಯಕರು, ಊಟ ಬಡಿಸುವವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಯನ್ನು ನಡೆಸಿ, ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು ಎಂದು ವಿವರಿಸಿದರು.
ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಕುಮಾರ್ ಸಿ.ಎಚ್ , ಡಾ. ಸುದರ್ಶನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
‘ಎಲ್ಲ ವಿದ್ಯಾರ್ಥಿನಿಲಯಗಳು, ಪಿಜಿಗಳ ಆಹಾರ ಸುರಕ್ಷತೆಯನ್ನು ಪರಿಶೀಲಿಸುವಂತೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಜತೆಗೆ ಅಲ್ಲಿನ ಸೌಲಭ್ಯಗಳು ಉತ್ತಮವಾಗಿರುವ ಬಗ್ಗೆ ಪರಿಶೀಲಿಸಿ ಪ್ರಮಾಣಪತ್ರ ಪಡೆಯುವಂತೆ ಸಲಹೆ ನೀಡಲಾಗಿದೆ
-ಪ್ರವೀಣ್ ಕುಮಾರ್ ಸಿ.ಎಚ್ , ಆಹಾರ ಸುರಕ್ಷತಾ ಅಧಿಕಾರಿ